ಚಾಮರಾಜನಗರ: ಜಿಲ್ಲೆಯ ಪವಿತ್ರ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಭೀಕರ ಘಟನೆ ಸಂಭವಿಸಿದೆ.
ನರಭಕ್ಷಕ ಚಿರತೆಯ ದಾಳಿಗೆ ಬೆಂಗಳೂರು ಮೂಲದ 8 ವರ್ಷದ ಬಾಲಕ ಹರ್ಷಿತ್ ದುರ್ಮರಣಕ್ಕೀಡಾದ ಘಟನೆ ಇಂದು ಮುಂಜಾನೆ ನಡೆದಿದೆ.
ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆ ಕಡೆಗೆ ಪಾದಯಾತ್ರೆ ಕೈಗೊಂಡಿದ್ದ ವೇಳೆ, ಸುಮಾರು ಬೆಳಿಗ್ಗೆ 7 ಗಂಟೆ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ಈ ದುರ್ಘಟನೆ ನಡೆದಿದೆ. ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಗೆ ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ.
ಕುಟುಂಬಸ್ಥರು ಕಿರುಚಾಡಿ ರಕ್ಷಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಂತರ ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ. ಚಿರತೆ ದಾಳಿಯಿಂದ ದೇಹದ ಕೆಲವು ಭಾಗಗಳು ಹಾನಿಗೊಂಡಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.
ಮಲೆ ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಕಾಡಂಚು ಪ್ರದೇಶಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ದಾಳಿಗೆ ಹಲವು ಜೀವಗಳು ಬಲಿಯಾಗಿದ್ದವು.
ಈ ಘಟನೆಯಿಂದ ಯಾತ್ರಾರ್ಥಿಗಳಲ್ಲಿ ಭೀತಿ ಹೆಚ್ಚಿದ್ದು, ಅರಣ್ಯ ಇಲಾಖೆ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.



