ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಹತ್ಯೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಪ್ರಗತಿ (19) ಹಾಗೂ ವೆಂಕಟನಾಯ್ಡು (45) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತಾಯಿ ಸೌಜನ್ಯ (40) ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಸಾಯಿ ವೆಂಕಟಮಣಿ (18) ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ತಂದೆ ಮತ್ತು ಅಕ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ತಾಯಿ ಸೌಜನ್ಯ ಅವರ ಮೇಲೂ ಹಲ್ಲೆ ನಡೆಸಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೃತ್ಯ ಎಸಗಿದ ಬಳಿಕ ಸಾಯಿ ವೆಂಕಟಮಣಿ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಾಯಗೊಂಡಿರುವ ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



