ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಬೆಂಗಳೂರು ನಗರದಂತೆ ಹುಬ್ಬಳ್ಳಿ-ಧಾರವಾಡ ನಗರಗಳು ಬೆಳವಣಿಗೆ ಹೊಂದುತ್ತಿವೆ. ಅವಳಿ ನಗರಗಳ ಬೆಳವಣಿಗೆಗೆ ಅಧಿಕಾರಿಗಳು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಬೇಕು.
ಅಲ್ಲದೇ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಬುಧವಾರ ಐಟಿ ಪಾರ್ಕ್ನಲ್ಲಿರುವ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಸಭಾಂಗಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ 25 ವರ್ಷಗಳಲ್ಲಿ ನಗರಗಳು ಹೇಗೆ ಬೆಳವಣಿಗೆ ಆಗಬೇಕು ಎಂಬುದನ್ನು ಅರಿತುಕೊಂಡು ಉತ್ತಮ ಯೋಜನೆಗಳನ್ನು ರೂಪಿಸಬೇಕಿದೆ.
ಬೆಂಗಳೂರು ನಗರಕ್ಕೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಅವಳಿ ನಗರಗಳು ಅಭಿವೃದ್ಧಿ ಆಗಬೇಕು. ಆಧುನಿಕ ವಿಜ್ಞಾನ-ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲು ಮುಂದಾಗಬೇಕಿದೆ. ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಲು ಯತ್ನಿಸಬೇಕು. ಆನ್ಲೈನ್ ವ್ಯವಸ್ಥೆ, ಹೊಸ ತಂತ್ರಜ್ಞಾನ ಮತ್ತು ನವೀನ ಕಲ್ಪನೆಯ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಘನ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಕಾಂಪೌಂಡ್ ನಿರ್ಮಿಸಬೇಕು. ಸರ್ಕಾರಿ ಉದ್ಯಾನಗಳನ್ನು ಕೈಗಾರಿಕೋದ್ಯಮಿಗಳು ಹಾಗೂ ಎನ್ಜಿಒಗಳಿಗೆ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಬೇಕಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರುದ್ರೇಶ ಗಾಳಿ ಮಾತನಾಡಿ, ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಚಿಟಗುಪ್ಪಿ ಹಾಗೂ ಮೇದಾರ ಓಣಿಯ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ತೋಳನಕೆರೆ, ಉಣಕಲ್ ಕೆರೆ ಹಾಗೂ ಮಹಾತ್ಮ ಗಾಂಧಿ ಪಾರ್ಕ್ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದೆ. ಜನತಾ ಬಜಾರ್ ಮಾರಾಟ ಮಳಿಗೆಯಲ್ಲಿ ಮೊದಲಿನ ವ್ಯಾಪಾರಸ್ಥರಿಗೆ ಅನುಕೂಲ ಮಾಡಿ ಕೊಡುವ ಕುರಿತು ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಮಹಾಪೌರರಾದ ರಾಮಣ್ಣ ಬಡಿಗೇರ, ಉಪಮಹಾಪೌರರಾದ ದುರ್ಗಮ್ಮ ಬೀಜವಾಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ, ಪಾಲಿಕೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಆಸ್ತಿ ತೆರಿಗೆ ಬಗ್ಗೆ ಗಮನ ಹರಿಸಿ
ಬಿಲ್ ಕಲೆಕ್ಟರ್ಗಳು ವಲಯವಾರು ಆಸ್ತಿಗಳನ್ನು ಸರಿಯಾಗಿ ಗುರುತಿಸಿ, ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. 1,81,148 ವಸತಿ ಆಸ್ತಿಗಳು, 34,798 ವಾಣಿಜ್ಯ ಆಸ್ತಿಗಳು ಹಾಗೂ 1,22,656 ಖಾಲಿ ಪ್ರದೇಶಗಳು ಸೇರಿ ಒಟ್ಟಾರೆ 3,38,602 ಆಸ್ತಿಗಳು ಪಾಲಿಕೆಗೆ ಒಳಪಡುತ್ತವೆ. ಒಟ್ಟು 2,744 ಬಾಡಿಗೆ ಪ್ರದೇಶಗಳಲ್ಲಿ, 1649 ಬಾಡಿಗೆ ಪ್ರದೇಶಗಳನ್ನು ಗುರುತಿಸಲಾಗಿದೆ. ಇನ್ನೂ 1,095 ಪ್ರದೇಶಗಳನ್ನು ಗುರುತಿಸುವುದು ಬಾಕಿಯಿವೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕ್ರೋಢೀಕರಿಸಬೇಕು ಎಂದು ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.



