ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದಾರನಾಥ ಧಾಮಕ್ಕೆ ಈ ಬಾರಿ ಭಕ್ತರ ಮಹಾಸಾಗರವೇ ಹರಿದು ಬರುತ್ತಿದ್ದು, ಯಾತ್ರಾರ್ಥಿಗಳ ಸಂಖ್ಯೆ ದಾಖಲೆ ಮಟ್ಟ ತಲುಪಿದೆ. ಪ್ರಸ್ತುತ ಯಾತ್ರಾ ಋತುವಿನಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ ಈಗಾಗಲೇ 5 ಲಕ್ಷದ ಗಡಿ ದಾಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ‘ಹೈ ಅಲರ್ಟ್’ ಘೋಷಿಸಿದೆ.
ಹಿಮಾಲಯ ಪರ್ವತ ಶ್ರೇಣಿಯ ಮಧ್ಯದಲ್ಲಿರುವ ಕೇದಾರನಾಥಕ್ಕೆ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಯಾತ್ರೆಯ ಆರಂಭಿಕ ಹಂತದಲ್ಲೇ ಇಷ್ಟು ದೊಡ್ಡ ಪ್ರಮಾಣದ ಜನಸಂದಣಿ ದಾಖಲಾಗಿರುವುದು ಪ್ರವಾಸೋದ್ಯಮ ಇಲಾಖೆಯಲ್ಲೂ ಅಚ್ಚರಿ ಮೂಡಿಸಿದೆ. ಆದರೆ ಹೆಚ್ಚುತ್ತಿರುವ ದಟ್ಟಣೆಯಿಂದ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಾಗಿದೆ.
ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಆರೋಗ್ಯ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಯಾತ್ರಾ ಮಾರ್ಗದುದ್ದಕ್ಕೂ ಸುಮಾರು 52 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇದುವರೆಗೆ 62 ಸಾವಿರಕ್ಕೂ ಹೆಚ್ಚು ಯಾತ್ರಿಕರು ಒಪಿಡಿ ಸೇವೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದ 26 ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ತುರ್ತುವಾಗಿ ಏರ್ಲಿಫ್ಟ್ ಮಾಡಿ ಉನ್ನತ ಚಿಕಿತ್ಸೆಗೆ ಕಳುಹಿಸಲಾಗಿದೆ.
ಎತ್ತರ ಪ್ರದೇಶಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಿರುವುದರಿಂದ ಈ ಬಾರಿ ಇಸಿಜಿ ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ 8 ಮಂದಿಯಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಪ್ರಾಣಾಪಾಯದಿಂದ ರಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ರುದ್ರಪ್ರಯಾಗದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರಾಮ್ ಪ್ರಕಾಶ್, “ಎತ್ತರ ಪ್ರದೇಶಗಳ ಹವಾಮಾನ ವೈಪರೀತ್ಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಶ್ವಾಸಕೋಶ ಸಮಸ್ಯೆ ಇರುವವರು ಹಾಗೂ ಸಣ್ಣ ಮಕ್ಕಳನ್ನು ಈ ಕಠಿಣ ಯಾತ್ರೆಗೆ ಕರೆತರದಿರುವುದು ಒಳಿತು” ಎಂದು ಮನವಿ ಮಾಡಿದ್ದಾರೆ.



