ದಾವಣಗೆರೆ: “ನಾನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಮಗ. ಶಿವನ ಮುಂದೆ ಇರುವ ಬಸವನಂತೆ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆಯೇ, ಮನೆಮಗನ ಮೇಲೆ ಅವರ ಆಶೀರ್ವಾದ ಯಾವಾಗಲೂ ಇರುತ್ತದೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಗುವ ನಿರೀಕ್ಷೆ ಹೊಂದಿದ್ದೆ. ಆದರೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಸಾಕಷ್ಟು ಅವಕಾಶಗಳಿದ್ದು, ಅದರ ಬಗ್ಗೆ ಕಾದು ನೋಡೋಣ ಎಂದು ಹೇಳಿದರು.
“ಪಕ್ಷದಲ್ಲಿ ಐದು-ಆರು ಬಾರಿ ಗೆದ್ದಿರುವ ಹಿರಿಯ ಶಾಸಕರು ಇದ್ದಾರೆ. ಅವರ ನಡುವೆ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇತ್ತು. ಆದರೆ ಈಗ ಅದರ ಬಗ್ಗೆ ಮಾತನಾಡುವುದಕ್ಕಿಂತ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುವುದು ಮುಖ್ಯ” ಎಂದು ತಿಳಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಭ್ರಷ್ಟಾಚಾರದ ಆರೋಪ ಯಾರ ಮೇಲೆ ಇಲ್ಲ ಹೇಳಿ? ಬಿಜೆಪಿಗೆ ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಇಲ್ಲ. ಆರೋಪ ಇರುವುದು ಬೇರೆ, ಅಪರಾಧ ಸಾಬೀತಾಗುವುದು ಬೇರೆ. ಕಾನೂನಿನ ಪ್ರಕಾರ ಬಂಧನವಾಗಿತ್ತು. ಈಗ ಅವರು ಹೊರಬಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಾದ ನಿರ್ಧಾರ” ಎಂದು ಸಮರ್ಥಿಸಿಕೊಂಡರು.
ಸಚಿವ ಸಂಪುಟದಲ್ಲಿ ಡಿ.ಕೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಆಪ್ತರಿಗೆ ಪ್ರತ್ಯೇಕವಾಗಿ ಸ್ಥಾನ ನೀಡಲಾಗಿದೆ ಎನ್ನುವ ಮಾತು ಸರಿಯಲ್ಲ. ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ನಮ್ಮ ಭಾಗದ ಕೆ.ಎಸ್. ಬಸವಂತಪ್ಪ ಅವರಿಗೆ ಅವಕಾಶ ನೀಡಿರುವುದು ಸಂತಸದ ವಿಷಯ ಎಂದು ಹೇಳಿದರು.
ಇದೇ ವೇಳೆ, “ನಾನು ರೈತರ ಕೋಟಾದಡಿ ಸಚಿವ ಸ್ಥಾನ ಕೇಳಿದ್ದೆ. ಆದರೆ ಈ ಬಾರಿ ಸಿಗಲಿಲ್ಲ. ಇನ್ನೂ ರಾಜಕೀಯ ಜೀವನದ ಆರಂಭದ ಹಂತದಲ್ಲಿದ್ದೇನೆ. ಮುಂದೆಯೂ ಅವಕಾಶಗಳಿವೆ. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ” ಎಂದು ತಮ್ಮ ಆಕಾಂಕ್ಷೆಯನ್ನು ಬಹಿರಂಗಪಡಿಸಿದರು.



