ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದ್ದು, ಅದಲ್ಲದೆ ಸಾಕ್ಷ್ಯಾಧಾರಗಳ ಕೊರತೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು.
ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾ ವರದಿ ತಿರಸ್ಕರಿಸುವಂತೆ ಕೋರಿ ಅರ್ಜಿ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನ್ಯಾಯಾಲಯಕ್ಕೆ ಹೋಗಿ, ಲೋಕಾಯುಕ್ತರು ಮುಡಾ ಪ್ರಕರಣದ ಸಂಬಂಧ ಸಲ್ಲಿಸಿರುವ ತನಿಖಾ ವರದಿಯ ಪ್ರತಿ ನೀಡುವಂತೆ ಮನವಿ ಮಾಡಿದ್ದೆ. ನಿನ್ನೆ ಲೋಕಾಯುಕ್ತರು ಅಂತಿಮ ವರದಿಯ ಕೆಲ ಪ್ರತಿಗಳನ್ನು ಮಾತ್ರ ನೀಡಿದ್ದು, ಮಾರ್ಚ್ 1ರ ಒಳಗೆ ಸಂಪೂರ್ಣ ತನಿಖಾ ವರದಿಯ ಪ್ರತಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ಈ ಬಗ್ಗೆ ನಾನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಾರ್ಚ್ 7ರಂದು ತಕರಾರು ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ಮಾಡಿದ್ದೇನೆ. ಅಂದು ನಾನು ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿ ಮತ್ತೆ ತನಿಖೆಗೆ ಆದೇಶಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.