ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮಗಳ ಅಭಿವೃದ್ಧಿಯಲ್ಲೇ ದೇಶದ ಅಭಿವೃದ್ಧಿ ಅಡಗಿದೆ ಎಂಬ ಮಹಾತ್ಮ ಗಾಂಧೀಜಿಯವರ ಚಿಂತನೆಗೆ ಅನುಗುಣವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ದೇಶಕ್ಕೇ ಮಾದರಿಯಾಗುವ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ನೂತನ ಕುಲಪತಿ ಡಾ. ಎಸ್.ವಿ. ನಾಡಗೌಡರ ಹೇಳಿದರು.
ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ಗದಗ ಜಿಲ್ಲಾ ಘಟಕ, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪ್ರಾಚಾರ್ಯರ ಸಂಘದ ವತಿಯಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ, ಸ್ಥಳೀಯ ಆಡಳಿತ ಮತ್ತು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಮಾಜಮುಖಿ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆ ಹಾಗೂ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ದೊರೆಯುವಂತೆ ವಿಶೇಷ ಯೋಜನೆಗಳನ್ನು ರೂಪಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಬಿ.ಜಿ. ಗಿರಿತಮ್ಮಣ್ಣವರ, ಐ.ಬಿ. ಹಾದಿಮನಿ, ಡಾ. ಬಿ.ಎಸ್. ರಾಥೋಡ್, ಎಸ್.ಬಿ. ಹಾವೇರಿ, ರವಿ ಕುಲಕರ್ಣಿ, ಎಸ್.ಎಂ. ಗುಳಗುಳಿ, ಉಪನ್ಯಾಸಕರಾದ ಡಾ. ವೈ.ಆರ್. ಬೇಲೇರಿ, ಎಸ್.ಐ. ಮೇಟಿ, ಶ್ರೀಶೈಲ್ ಬೀರಕಬ್ಬಿ, ಕೆ.ಎಸ್. ಗಂಗನಗೌಡ್ರ, ಬಿ.ಬಿ. ಮಿರ್ಜಿ, ಶರಣು ಚೇಗರೆಡ್ಡಿ, ನಿವೃತ್ತ ಉಪನ್ಯಾಸಕರಾದ ಜಿ.ಎಂ. ಹಕಾರಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಅಶೋಕ ಅಂಗಡಿ ಸ್ವಾಗತಿಸಿದರು. ಎಂ.ಸಿ. ಕಟ್ಟಿಮನಿ ವಂದಿಸಿದರು.
“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ದೇಶದಲ್ಲೇ ಮಾದರಿಯಾಗುವ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.”
– ಡಾ. ಎಸ್.ವಿ. ನಾಡಗೌಡರ, ಕುಲಪತಿ



