ಬೆಂಗಳೂರು: ಪರವಾನಗಿ ಹೊಂದಿರದ ಚಾಲಕನಿಂದ ರಸ್ತೆ ಅಪಘಾತ ಸಂಭವಿಸಿದರೆ, ಆ ವಾಹನದ ಮಾಲೀಕರೇ ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಶಾಲಾ ವಾಹನ ನಿಯಂತ್ರಣ ಕಳೆದುಕೊಂಡು ನದಿಗೆ ಬಿದ್ದು ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಮಾನ್ಯ ಚಾಲನಾ ಪರವಾನಗಿ ಹೊಂದಿರದ ಕಾರಣ ಮೃತ ಚಾಲಕನ ಕುಟುಂಬಕ್ಕೆ ಪರಿಹಾರ ಪಾವತಿಸುವಂತೆ ವಾಹನ ಮಾಲೀಕರೂ ಆಗಿರುವ ಶಾಲಾ ಮುಖ್ಯೋಪಾಧ್ಯಾಯರಿಗೆ ನ್ಯಾಯಪೀಠ ಆದೇಶಿಸಿತು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕುಲಿಪಾಡಿಯ ಬಲ್ಮಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೆ. ಮನ್ಮಥರಾವ್ ಅವರ ಪೀಠ ಈ ತೀರ್ಪು ನೀಡಿದೆ.
ಘಟನೆ ನಡೆದ ವೇಳೆ ಬದ್ರುದ್ದೀನ್ ಚಾಲನೆ ಮಾಡುತ್ತಿದ್ದ ಬಸ್ವು 7,500 ಕೆ.ಜಿ ಗಿಂತ ಕಡಿಮೆ ತೂಕದ ವಾಹನವಾಗಿದ್ದು, ಅದನ್ನು ಚಾಲನೆ ಮಾಡಲು ಅಗತ್ಯವಾದ ಮಾನ್ಯ ಹಾಗೂ ಅಧಿಕೃತ ಚಾಲನಾ ಪರವಾನಗಿ ಅವರ ಬಳಿ ಇರಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಚಾಲಕ ಪರವಾನಗಿ ಹೊಂದಿದ್ದರು ಎಂಬ ವಾದಕ್ಕೆ ಬೆಂಬಲವಾಗಿ ಬಸ್ ಮಾಲೀಕರಾದ ಶಾಲಾ ಮುಖ್ಯೋಪಾಧ್ಯಾಯರು ಯಾವುದೇ ದೃಢ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆ, ಅಧೀನ ನ್ಯಾಯಾಲಯ ನೀಡಿದ್ದ ಪರಿಹಾರ ಪಾವತಿ ಆದೇಶ ಸೂಕ್ತವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.
ಚಾಲಕರು ಮಾನ್ಯ ಚಾಲನಾ ಪರವಾನಗಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳುವುದು ವಾಹನ ಮಾಲೀಕರ (ಉದ್ಯೋಗದಾತರ) ಕರ್ತವ್ಯವಾಗಿದೆ. ಈ ಜವಾಬ್ದಾರಿಯನ್ನು ನಿರ್ಲಕ್ಷಿಸಿದರೆ ಹಾಗೂ ಚಾಲಕ ಅಧಿಕೃತ ಪರವಾನಗಿ ಹೊಂದಿರದಿದ್ದರೆ, ಅದು ವಿಮಾ ಪಾಲಿಸಿ ಷರತ್ತುಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಇಂತಹ ಸಂದರ್ಭಗಳಲ್ಲಿ ವಾಹನಕ್ಕೆ ವಿಮೆ ಇದ್ದರೂ, ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಹೊಣೆಯಿಂದ ವಿಮಾ ಕಂಪನಿ ಮುಕ್ತವಾಗುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.



