ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಜರುಗಿದವು.
ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗ ಸಂಸ್ಥೆಯ ಶ್ರೀಮತಿ ಪಿಎಸ್ಬಿಡಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯ ಜೆ.ಡಿ. ಲಮಾಣಿ, ಪರಿಸರ ಉತ್ತಮವಾಗಿದ್ದಾಗ ಮಾತ್ರ ಜಗತ್ತಿನ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯ. ಆದರೆ ಪರಿಸರವನ್ನು ಕಾಪಾಡುವ ಬದಲು ಹಾಳು ಮಾಡುವ ಸಂಸ್ಕೃತಿ ಹೆಚ್ಚುತ್ತಿರುವುದು ವಿಷಾದನೀಯ ಸಂಗತಿ ಎಂದು ಹೇಳಿದರು.
ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮತ್ತು ಹೊಣೆಗಾರಿಕೆ ಬೆಳೆಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಪ್ರತಿಜ್ಞೆ ಸ್ವೀಕರಿಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇನ್ನೊಂದೆಡೆ ಉಮಾ ವಿದ್ಯಾಲಯ ಹೈಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಎಸ್.ಬಿ. ಸಂಗನಪೇಟ ಸಸಿ ನೆಡುವ ಮೂಲಕ ಪರಿಸರ ಕಾಳಜಿ ವಹಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಅಶೋಕ ಕಳ್ಳಿಮನಿ, ಅಶೋಕ ಲಿಂಗಶೆಟ್ಟಿ, ಶಿಕ್ಷಕ ವೃಂದ, ಪುರಸಭೆ ಸಿಬ್ಬಂದಿ ಹಾಗೂ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅದೇ ರೀತಿ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಯೋಧ ಎಚ್.ಡಿ. ಸಂಜೀವಣ್ಣ, “ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಕಾಡು ಬೆಳೆಸಿ ನಾಡು ಉಳಿಸಿ ಎನ್ನುವ ಧ್ಯೇಯ ಪ್ರತಿಯೊಬ್ಬರದ್ದಾಗಬೇಕು” ಎಂದು ಹೇಳಿದರು.
ವಿಶ್ರಾಂತ ಶಿಕ್ಷಕ ಐ.ಎಸ್. ಮಡಿವಾಳರ ಮಾತನಾಡಿ, ಪರಿಸರ ಸಂರಕ್ಷಣೆಯ ಬಗ್ಗೆ ಜಾಗತಿಕ ಜಾಗೃತಿ ಮೂಡಿಸುವುದು ಹಾಗೂ ಪ್ರಕೃತಿಯನ್ನು ರಕ್ಷಿಸಲು ಜನರನ್ನು ಪ್ರೇರೇಪಿಸುವುದೇ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಮುಖ್ಯಶಿಕ್ಷಕ ಬಸವರಾಜ ಕುಂಬಾರ ಮಾತನಾಡಿದರು. ಶಿಕ್ಷಕರಾದ ಎಚ್.ಡಿ. ನಿಂಗರೆಡ್ಡಿ, ಆರ್.ಎಂ. ಶಿರಹಟ್ಟಿ, ಎಲ್.ಎ. ಬಣಕಾರ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
“ಪರಿಸರದ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಅದರ ಬಗ್ಗೆ ಪ್ರತಿಯೊಬ್ಬರಲ್ಲೂ ಪ್ರಬುದ್ಧತೆ ಬೆಳೆದು ಬರಬೇಕು.”
— ಜೆ.ಡಿ. ಲಮಾಣಿ
“ಪರಿಸರದಿಂದಲೇ ನಮ್ಮ ಆರೋಗ್ಯ ಮತ್ತು ಬದುಕು. ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.”
ಎಚ್.ಡಿ. ಸಂಜೀವಣ್ಣ



