ಬೆಂಗಳೂರು: ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಧಾನಸಭಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿದೆ.
ಮರಳು ಮಾಫಿಯಾಗಳ ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಅಸಹಾಯಕತೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ತಾರಾ ವಿತಾಸ್ತ ಗಂಜು ಅವರನ್ನೊಳಗೊಂಡ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮೂರು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಇದೇ ವೇಳೆ, ಅರ್ಜಿಯ ವಿಚಾರಣೆಯನ್ನು ಸೂಕ್ತ ನ್ಯಾಯಪೀಠದ ಮುಂದೆ ನಿಯೋಜಿಸುವಂತೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ.
ನ್ಯಾಯಪೀಠ ತನ್ನ ಆದೇಶದಲ್ಲಿ, 2026ರ ಜನವರಿ 27ರಂದು ನಡೆದ ವಿಧಾನಸಭಾ ಕಲಾಪದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದೆ. ಅಕ್ರಮ ಮರಳು ಗಣಿಗಾರಿಕೆ ದೊಡ್ಡ ದಂಧೆಯಾಗಿದೆ. ಈ ಪ್ರಕರಣದಲ್ಲಿ ಯಾರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲ, ಯಾರನ್ನೂ ನೇರವಾಗಿ ದೂಷಿಸುವುದಿಲ್ಲ. ಇದು ಅತ್ಯಂತ ಮುಜುಗರದ ವಿಷಯವಾಗಿದ್ದು, ಅನೇಕ ಪ್ರಭಾವಿ ವ್ಯಕ್ತಿಗಳು ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಚಿವರು ಹೇಳಿರುವುದನ್ನು ನ್ಯಾಯಾಲಯ ಗಮನಿಸಿದೆ. ಈ ಹೇಳಿಕೆಗಳು ಜನವರಿ 28ರಂದು ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿವೆ ಎಂದು ನ್ಯಾಯಪೀಠ ತಿಳಿಸಿದೆ.
ಅಲ್ಲದೆ, ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ರಾತ್ರಿ ವೇಳೆ ನಿರಂತರವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತು ಮಾಧ್ಯಮ ವರದಿಗಳನ್ನು ನ್ಯಾಯಾಲಯ ಉಲ್ಲೇಖಿಸಿದೆ. ಗಣಿಗಾರಿಕೆಯಿಂದ ಉಂಟಾಗುವ ಧೂಳಿನಿಂದ ಈ ಭಾಗದ ರೈತರು ಬೆಳೆಯುವ ಬೆಳೆಗಳಿಗೆ ತೀವ್ರ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ರೈತರು ಮಾಡಿರುವುದನ್ನೂ ನ್ಯಾಯಪೀಠ ದಾಖಲಿಸಿದೆ.
ಈ ಹಿನ್ನೆಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.



