ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಬೂದಿಹಾಳ ಸೇರಿದಂತೆ ಕೆಲ ಸರ್ಕಾರಿ ಹಳ್ಳಗಳು ಹಾಗೂ ಪಟ್ಟಾ ಜಮೀನುಗಳಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದರಿಂದ ಜಾನುವಾರುಗಳಿಗೆ ನೀರಿನ ಆಸರೆಯಾಗಬೇಕಿದ್ದ ಹಳ್ಳಗಳು ಅಪಾಯದ ತಾಣಗಳಾಗಿ ಮಾರ್ಪಟ್ಟಿವೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೂದಿಹಾಳ ಹಳ್ಳದಲ್ಲಿ ಯಂತ್ರೋಪಕರಣಗಳ ಮೂಲಕ ಆಳವಾದ ಗುಂಡಿಗಳನ್ನು ತೋಡಿ ಮರಳು ಹೊರತೆಗೆಯಲಾಗುತ್ತಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿದರೆ ಜನ-ಜಾನುವಾರುಗಳ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ಪಟ್ಟಾ ಜಮೀನುಗಳಲ್ಲಿಯೂ ಯಾವುದೇ ಪರವಾನಗಿ ಪಡೆಯದೆ ಹಗಲು-ರಾತ್ರಿ ಮರಳು ತೆಗೆಯಲಾಗುತ್ತಿದ್ದು, ಮಣ್ಣು ಮಿಶ್ರಿತ ಮರಳನ್ನು ಹಳ್ಳದಲ್ಲೇ ಶುಚಿಗೊಳಿಸಿ ಸಾಗಾಟ ಮಾಡಲಾಗುತ್ತಿದೆ ಎನ್ನಲಾಗಿದೆ.
ಅಕ್ರಮ ಮರಳುಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೂ ಅಪಾರ ನಷ್ಟ ಉಂಟಾಗುತ್ತಿದ್ದರೂ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರಿ ಹಳ್ಳ ಮತ್ತು ಪಟ್ಟಾ ಜಮೀನುಗಳಲ್ಲಿ ಪರವಾನಗಿ ಇಲ್ಲದೆ ನಡೆಯುತ್ತಿರುವ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಪರವಾನಗಿ ಇಲ್ಲದೆ ಅಕ್ರಮ ಮರಳು ಸಾಗಾಟ ನಡೆಸಿದವರ ವಿರುದ್ಧ ಈಗಾಗಲೇ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಸ್ತುತ ಸರ್ಕಾರಿ ಹಳ್ಳ ಅಥವಾ ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆಗೆ ಯಾವುದೇ ಪರವಾನಗಿ ನೀಡಿಲ್ಲ. ಅಕ್ರಮ ಚಟುವಟಿಕೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
“ಸರ್ಕಾರಿ ಹಳ್ಳ ಹಾಗೂ ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆಗೆ ಯಾವುದೇ ಪರವಾನಗಿ ನೀಡಿಲ್ಲ. ಅಕ್ರಮ ಚಟುವಟಿಕೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.”
– ಕೆ. ರಾಘವೇಂದ್ರ ರಾವ್, ತಹಸೀಲ್ದಾರ್



