ಗದಗ: ತುಂಗಭದ್ರಾ ನದಿಯಲ್ಲಿ ಎಗ್ಗಿಲ್ಲದೇ ಸಾಗುತ್ತಿದ್ದ ಅಕ್ರಮ ಮರಳು ದಂಧೆಗೆ ಗದಗ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಎಸ್ಪಿ ರೋಹನ್ ಜಗದೀಶ್ ನೀಡಿದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಮುಂಡರಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಐದಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಮುಂಡರಗಿ ತಾಲೂಕಿನ ಗಂಗಾಪೂರ, ಕೊರ್ಲಹಳ್ಳಿ ಹಾಗೂ ಸಿಂಗಟಾಲೂರು ಗ್ರಾಮಗಳ ಸುತ್ತಮುತ್ತ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿತ್ತು. ಈ ಅಕ್ರಮ ದಂಧೆಗೆ ಸ್ಥಳೀಯ ಮಟ್ಟದಲ್ಲಿ ತಾಲೂಕು ಆಡಳಿತದ ಸಾಥ್ ಇದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಎಸ್ಪಿ ರೋಹನ್ ಜಗದೀಶ್ ಅಕ್ರಮ ಮರಳು ಸಾಗಾಟವನ್ನು ಕಟ್ಟುನಿಟ್ಟಾಗಿ ತಡೆಯುವಂತೆ ಸೂಚನೆ ನೀಡಿದ್ದರು. ಅದರಂತೆ ಅಲರ್ಟ್ ಆದ ಮುಂಡರಗಿ ಪೊಲೀಸರು ದಾಳಿ ನಡೆಸಿ ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಪೊಲೀಸ್ ಇಲಾಖೆಯ ಈ ಕ್ರಮದಿಂದ ಮರಳು ಮಾಫಿಯಾಗೆ ತಾತ್ಕಾಲಿಕ ಕಡಿವಾಣ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸೂಚನೆ ದೊರೆತಿದೆ.
ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಮರುಕಳಿಸುತ್ತಿರುವುದು ಪರಿಸರ ಹಾಗೂ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಪೊಲೀಸ್ ಇಲಾಖೆಯ ಕ್ರಮದಿಂದ ತಾತ್ಕಾಲಿಕ ತಡೆ ಕಂಡರೂ, ಶಾಶ್ವತ ಪರಿಹಾರಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.



