HomeKarnataka Newsದಂಡ ಪಾವತಿಸದಿದ್ದರೂ ಜೈಲು ಶಿಕ್ಷೆಗೆ ಮಿತಿ ಇದೆ: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ...

ದಂಡ ಪಾವತಿಸದಿದ್ದರೂ ಜೈಲು ಶಿಕ್ಷೆಗೆ ಮಿತಿ ಇದೆ: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

For Dai;y Updates Join Our whatsapp Group

Spread the love

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವಿಧಿಸಲಾದ ದಂಡವನ್ನು ಪಾವತಿಸದ ಆರೋಪಿಯನ್ನು ಮೂಲ ಅಪರಾಧಕ್ಕೆ ನಿಗದಿಪಡಿಸಿರುವ ಗರಿಷ್ಠ ಶಿಕ್ಷೆಯ ಅವಧಿಯನ್ನು ಮೀರಿ ಜೈಲಿನಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯ ಸೆಕ್ಷನ್ 138ರಡಿ ದಾಖಲಾಗಿದ್ದ ಮೂರು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 65 ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 8(3)ರ ಪ್ರಕಾರ, ದಂಡ ಪಾವತಿಸದ ಹಿನ್ನೆಲೆಯಲ್ಲಿ ವಿಧಿಸುವ ಜೈಲು ಶಿಕ್ಷೆ ಮೂಲ ಅಪರಾಧಕ್ಕೆ ನಿಗದಿಪಡಿಸಿರುವ ಗರಿಷ್ಠ ಶಿಕ್ಷೆಯ ನಾಲ್ಕನೇ ಒಂದು ಭಾಗವನ್ನು ಮೀರಬಾರದು ಎಂದು ನ್ಯಾಯಪೀಠ ತಿಳಿಸಿದೆ. ಚೆಕ್ ಬೌನ್ಸ್ ಅಪರಾಧಕ್ಕೆ ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ನಿಗದಿಯಾಗಿರುವುದರಿಂದ, ದಂಡ ಪಾವತಿಸದಿದ್ದರೆ ಗರಿಷ್ಠ ಆರು ತಿಂಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದೇ ವೇಳೆ, ಜೈಲು ಶಿಕ್ಷೆಯನ್ನು ಅನುಭವಿಸಿದ ಬಳಿಕವೂ ದಂಡ ಪಾವತಿಸುವ ಹೊಣೆಗಾರಿಕೆ ಕೊನೆಗೊಳ್ಳುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. ಕಾನೂನಿನ ಪ್ರಕಾರ ಸರ್ಕಾರ ಅಥವಾ ದೂರುದಾರರು ನಂತರವೂ ಆಸ್ತಿ ಜಪ್ತಿ ಸೇರಿದಂತೆ ವಿವಿಧ ಕಾನೂನು ಕ್ರಮಗಳ ಮೂಲಕ ದಂಡದ ಮೊತ್ತವನ್ನು ವಸೂಲಿ ಮಾಡಲು ಅವಕಾಶವಿದೆ ಎಂದು ತಿಳಿಸಿದೆ.

ದೆಹಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ದಂಡ ಪಾವತಿಸದ ಕಾರಣಕ್ಕೆ ವಿಧಿಸುವ ಜೈಲು ಶಿಕ್ಷೆಯನ್ನು ಹೆಚ್ಚುವರಿ ಶಿಕ್ಷೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಅದು ನ್ಯಾಯಾಲಯದ ಹಣಕಾಸು ಆದೇಶವನ್ನು ಜಾರಿಗೊಳಿಸುವ ಕ್ರಮ ಮಾತ್ರವಾಗಿದ್ದು, ದಂಡ ಪಾವತಿಸಲು ಅಸಮರ್ಥನಾದ ವ್ಯಕ್ತಿಯನ್ನು ದೀರ್ಘಾವಧಿ ಜೈಲಿನಲ್ಲಿ ಇರಿಸುವುದು ಸಂವಿಧಾನದಲ್ಲಿ ಪ್ರತಿಪಾದಿಸಿರುವ ವೈಯಕ್ತಿಕ ಸ್ವಾತಂತ್ರ್ಯದ ತತ್ವಗಳಿಗೆ ವಿರುದ್ಧವಾಗಲಿದೆ ಎಂದು ನ್ಯಾಯಪೀಠ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:
ಅರ್ಜಿದಾರನ ವಿರುದ್ಧದ ಮೂರು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ದೋಷಾರೋಪಣೆ ಸಾಬೀತಾಗಿದ್ದು, ಕೋಟ್ಯಂತರ ರೂಪಾಯಿ ದಂಡ ವಿಧಿಸಲಾಗಿತ್ತು. ದಂಡ ಪಾವತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರತಿ ಪ್ರಕರಣದಲ್ಲೂ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದನು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!