ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ, ಸಡಗರ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪಟ್ಟಣದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ. ಪ್ರಕಾಶ ಹೊಸಮನಿ, ದೇವಣ್ಣ ಬಳಿಗಾರ, ಮಾದೇವಪ್ಪ ಅಣ್ಣಿಗೇರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಆಡಳಿತಾಧಿಕಾರಿ ಹಾಗೂ ಇಒ ಮಂಜುಳಾ ಹಕಾರಿ ಧ್ವಜಾರೋಹಣ ನೆರವೇರಿಸಿದರು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಮಡಿವಾಳರ, ಕೃಷ್ಣಪ್ಪ ಧರ್ಮರ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.
ನ್ಯಾಯಾಲಯದ ಆವರಣದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಭರತಯೋಗೀಶ ಕರಗುದರಿ ಧ್ವಜಾರೋಹಣ ನೆರವೇರಿಸಿದರು. ನ್ಯಾಯವಾದಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ನಗರ ಭೂ-ಮಾಪನ ಕಚೇರಿಯಲ್ಲಿ ಭೂ-ಮಾಪನ ಅಧಿಕಾರಿ ವಿದ್ಯಾ ತಳೇಕರ ಹಾಗೂ ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿ.ಎಸ್. ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಕಚೇರಿ ಸಿಬ್ಬಂದಿ ಹಾಗೂ ಮಾಜಿ ಸೈನಿಕರು ಭಾಗವಹಿಸಿದ್ದರು.
ಪಟ್ಟಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ನಾಗರಾಜ ಗಡದ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಶ್ರೀಕಾಂತ ಕಾಟೇವಾಲೆ ಹಾಗೂ ಪಟ್ಟಣದ ಗಾಂಧಿ ಮಂದಿರದಲ್ಲಿ ಹಿರಿಯ ವರ್ತಕ ಭರತರಾಜ ಬರಿಗಾಲಿ ಧ್ವಜಾರೋಹಣ ನೆರವೇರಿಸಿದರು.
ಶಾಲೆಯ ಹಳೆಯ ವಿದ್ಯಾರ್ಥಿಯಿಂದ ಧ್ವಜಾರೋಹಣ
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಲೋಕಾಯುಕ್ತ ನ್ಯಾಯಾಧೀಶ ರಮಾಕಾಂತ ಚವ್ಹಾಣ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಹಳೆಯ ವಿದ್ಯಾರ್ಥಿಯೊಬ್ಬರು ರಾಷ್ಟ್ರೀಯ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
ಪಟ್ಟಣದ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಹಾಗೂ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ, ದೇಶಭಕ್ತಿ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿಯೂ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.



