ವಿಜಯಸಾಕ್ಷಿ ಸುದ್ದಿ, ಗದಗ : ಕೇಂದ್ರ ಸಂವಹನ ಇಲಾಖೆ ಧಾರವಾಡ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನದ ಎರಡನೇ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೃತ್ಯುಂಜಯ ಗುಡ್ಡದಾನ್ವೇರಿ ತಮ್ಮ ಇಲಾಖೆಯಲ್ಲಿನ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಇರುವ ಸೌಲಭ್ಯಗಳು, ಮಕ್ಕಳ ಬೆಳವಣಿಗೆಗೆ ಪೂರಕವಾದ ಪೌಷ್ಟಿಕ ಆಹಾರಗಳ ಕುರಿತು ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ ಮಾತನಾಡಿ, ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ಅದರಲ್ಲಿರುವ ಸೌಲಭ್ಯಗಳ ಕುರಿತು ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಜನರಲ್ ಸ್ಪೆಷಲಿಸ್ಟ್ ಮಧುಶ್ರೀ ಉಪ್ಪಾರ ಮಾತನಾಡಿ, ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಸೌಲಭ್ಯಗಳ ಕುರಿತು ಹಾಗೂ ಇತರ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆಯ ಸಂಯೋಜಕರಾದ ಮುರಳೀಧರ ಕಾರಭಾರಿ ಪ್ರಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಕ್ರೀಡಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಪ್ರೌಢಶಾಲೆಯ ಮುಖ್ಯ ಗುರುಗಳಾದ ಎಸ್.ಎಚ್. ಪೂಜಾರ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೈ ಭೀಮ ಕಲಾ ತಂಡದ ಮುಖ್ಯಸ್ಥ ಬಸವರಾಜ ಮತ್ತು ತಂಡದವರು ವಿವಿಧ ಜಾನಪದ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.