ಬೆಳಗಾವಿ:- ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಇನ್ಸ್ಪೆಕ್ಟರ್ ಓರ್ವರು ಠಾಣೆ ಮುಂದೆಯೇ ತಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ ಸದಲಗಿಯವರು ಹಾರೂಗೇರಿ ಪೊಲೀಸ್ ಠಾಣೆ ಪಿಎಸ್ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.
ಇನ್ಸ್ಪೆಕ್ಟರ್ ಅಶೋಕ ಸದಲಗಿ ತಂದೆ ಅಣ್ಣಪ್ಪ ಅವರ ಜಮೀನಿಗೆ ಜನವರಿ10ರಂದು ಬಾಬು ನಡೋಣಿ ಪ್ರತಾಪ್ ಹರೋಲಿ, ವಸಂತ ಚೌಗಲಾ ಎಂಬುವರು ಅಕ್ರಮವಾಗಿ ಪ್ರವೇಶ ಮಾಡಿದ್ದರು. ಅಕ್ರಮವಾಗಿ ಪ್ರವೇಶಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಮತ್ತು ಇವರ ಗ್ಯಾಂಗ್ ಅಣ್ಣಪ್ಪ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೂಡಲೆ ಅಣ್ಣಪ್ಪ 112ಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ್ದರು. ಬಳಿಕ, ಅಣ್ಣಪ್ಪ ಹಾಗೂ ಬಾಬು ನಡೋಣಿ ಸೇರಿದಂತೆ ಎಲ್ಲರನ್ನೂ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದರು. ಪೊಲೀಸರು ಅಣ್ಣಪ್ಪರನ್ನು ಇಡೀ ದಿನ ಠಾಣೆಯಲ್ಲಿರಿಸಿಕೊಂಡು ಕಿರುಕುಳ ನೀಡಿದ್ದಾರೆ ಆರೋಪಿಸಲಾಗಿದೆ. ಸಂಜೆ ಆಗುತ್ತಿದ್ದಂತೆ ಶುಗರ್ ಕಡಿಮೆಯಾಗಿ, ಬಿಪಿ ಹೆಚ್ಚಾಗಿ ಅಣ್ಣಪ್ಪ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ, ಅಣ್ಣಪ್ಪರ ಎರಡನೇ ಪುತ್ರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಬಳಿಕ, ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಇನ್ಸ್ಪೆಕ್ಟರ್ ಅಶೋಕ್ ಅವರು ಹಾರೂಗೇರಿ ಪಿಎಸ್ಐ, ಸಿಪಿಐ ಮತ್ತು ಅಥಣಿ ಡಿಐಎಸ್ಪಿಗೆ ಮನವಿ ಮಾಡಿದ್ದರು. ಆದರೆ, ದೂರು ದಾಖಲಿಸಿಕೊಳ್ಳದೆ ಪೊಲೀಸರು ಬೇಜವಾಬ್ದಾರಿತನದಿಂದ ವರ್ತಿಸಿದ್ದರು.
ಇಂದು ಶನಿವಾರ ಇನ್ಸ್ಪೆಕ್ಟರ್ ಅಶೋಕ್ ತಂದೆ ಅಣ್ಣಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಇನ್ಸ್ಪೆಕ್ಟರ್ ಅಶೋಕ್ ಹಾರುಗೇರಿ ಪೊಲೀಸ್ ಠಾಣೆ ಎದರು ತಂದೆಯ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.