ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಿದ ಬಳಿಕ ಅವರನ್ನು ಮನೆಯಲ್ಲಿ ಕೂರಿಸದೇ ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯಲು ಬಿಡಬೇಕು.
ಬಸವಣ್ಣನವರ ಕಾಯಕವೇ ಕೈಲಾಸ ಎಂಬ ನಾಣ್ಣುಡಿಯಂತೆ ತಮ್ಮ ಮಕ್ಕಳಿಗೆ ಶ್ರಮ ಸಂಸ್ಕೃತಿಯನ್ನು ರೂಢಿಸಬೇಕು ಎಂದು ಶ್ರೀ ಅನ್ನಪೂರ್ಣೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಸದಾಶಿವಯ್ಯ ಎಸ್. ಮದರಿಮಠ ಹೇಳಿದರು.
ನಗರದ ಮುಳಗುಂದ ನಾಕಾ ಬಳಿಯ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ ನಡೆದ ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವ ಜನರು ವ್ಯಾಪಾರ, ಉದ್ಯೋಗ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಬೇಕು. ಜೊತೆಗೆ ತಮ್ಮ ಪಾಲಕರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಯುವ ಸಮುದಾಯ ಸಮಾಜದ ಮುಂಚೂಣಿಗೆ ಬಂದು ತಾವೂ ಉದ್ಯೋಗ ಮಾಡುವುದರೊಂದಿಗೆ ತಮ್ಮ ಜೊತೆ ಹಲವು ಜನರಿಗಾದರೂ ಉದ್ಯೋಗ ನೀಡುವ ಮೂಲಕ ಉದ್ಯೋಗದಾತರಾಗಿ ಸಮಾಜದಲ್ಲಿರುವ ನಿರುದ್ಯೋಗದ ಪೆಡಂಭೂತವನ್ನು ಹೊಡೆದೋಡಿಸಬೇಕು ಎಂದು ಹೇಳಿದರು.
ಶ್ರೀ ಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಶ್ರೀ ಅನ್ನಪೂರ್ಣೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ. ಸಂಶಿಮಠ, ಅಧ್ಯಕ್ಷ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ, ಡಾ. ರಾಜಗುರು ಗುರುಸ್ವಾಮಿ ಕಲಕೇರಿ, ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ, ಪೂಜಾ ಸಮಿತಿ ಅಧ್ಯಕ್ಷ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹ ಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.
ಮಂಗಲಾ ಯಾನಮಶೆಟ್ಟಿ ಸ್ವಾಗತಿಸಿದರು. ವಿ.ಎಂ. ಕುಂದಾಳಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಯು.ಆರ್. ಭೂಸನೂರಮಠ ವಂದಿಸಿದರು.



