ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿ ಜೀವನವು ಕೇವಲ ಜ್ಞಾನ ಪಡೆಯುವ ಹಂತವಲ್ಲ. ಉತ್ತಮ ಮೌಲ್ಯಗಳನ್ನು ರೂಢಿಸಿಕೊಂಡು, ವ್ಯಕ್ತಿತ್ವವನ್ನು ಬೆಳೆಸಿಕೊಂಡು ಆದರ್ಶ ಬದುಕಿನತ್ತ ಸಾಗುವ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಮೌಲ್ಯಾಧಾರಿತ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಪ್ರೊ. ಪ್ರೇಮಲತಾ ಹಿರೇಮಠ ಹೇಳಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ. ೨ರಲ್ಲಿ ಗದಗ ಜಿಲ್ಲಾ ಶರಣ ಸಂಕುಲದ ಶರಣೆ ಅಕ್ಕಮಹಾದೇವಿಯ ಕದಳಿಶ್ರೀ ಮಹಿಳಾ ವೇದಿಕೆ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ‘ಅಮೃತ ಭೋಜನ–ಜ್ಞಾನ ಸಿಂಚನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಪಾಲಕರು, ಶಿಕ್ಷಕರು ಹಾಗೂ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಮಕ್ಕಳ ಉಜ್ವಲ ಭವಿಷ್ಯ ಹಾಗೂ ಮೌಲ್ಯಯುತ ಬದುಕಿಗಾಗಿ ಅವರ ಮನಸ್ಸಿನಲ್ಲಿ ಉತ್ತಮ ಮೌಲ್ಯಗಳ ಬೀಜ ಬಿತ್ತುವ ಕೆಲಸ ನಿರಂತರವಾಗಿ ನಡೆಯಬೇಕು ಎಂದರು.
ಮಕ್ಕಳಿಗೆ ಸಿಹಿ ಭೋಜನ ನೀಡುವುದರ ಜೊತೆಗೆ ನೈತಿಕ ಹಾಗೂ ಮಾನವೀಯ ಮೌಲ್ಯಗಳ ಅರಿವು ಮೂಡಿಸುವ ಕದಳಿಶ್ರೀ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಜೊತೆಗೆ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದರು.
ಅತಿಥಿಯಾಗಿ ಆಗಮಿಸಿದ್ದ ಖ್ವಾಜಾಮೈನುದ್ದೀನ ಜಾನಿಸಾಬ ಹಣಗಿ ಮಾತನಾಡಿ, ಉತ್ತಮ ಮೌಲ್ಯಗಳು ಉತ್ತಮ ವ್ಯಕ್ತಿತ್ವದ ಅಡಿಪಾಯವಾಗಿದ್ದು, ಉತ್ತಮ ವ್ಯಕ್ತಿತ್ವ ಹೊಂದಿದವರಿಂದಲೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಹಾಗೂ ನಮ್ರತೆಯನ್ನು ರೂಢಿಸಿಕೊಳ್ಳಬೇಕು ಎಂದರು.
ಇನ್ನೋರ್ವ ಅತಿಥಿ ರೇಖಾ ರೊಟ್ಟಿ ಮಾತನಾಡಿ, ವಿದ್ಯಾರ್ಥಿಗಳು ದೇಶದ ಭವಿಷ್ಯದ ನಿರ್ಮಾತೃಗಳಾಗಿದ್ದು, ಅವರ ಜೀವನದಲ್ಲಿ ಮೌಲ್ಯಗಳಿಗೆ ಪ್ರಮುಖ ಸ್ಥಾನವಿದೆ. ಉತ್ತಮ ಶಿಕ್ಷಣದ ಜೊತೆಗೆ ಸರಿಯಾದ ಜೀವನ ಕ್ರಮವನ್ನು ಅನುಸರಿಸುವ ಮೂಲಕ ಯಶಸ್ಸಿನತ್ತ ಸಾಗಬೇಕು ಎಂದರು.
ಕದಳಿಶ್ರೀ ವೇದಿಕೆಯ ಸಂಚಾಲಕಿ ಕವಿತಾ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿವರ್ಷ ಶ್ರಾವಣ ಮಾಸದಲ್ಲಿ ಶಾಲಾ-ಕಾಲೇಜುಗಳಲ್ಲಿ ಉತ್ತಮ ಮೌಲ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ, ಸಿಹಿ ಭೋಜನ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದೆ. ಶಿಕ್ಷಣ ಪ್ರೇಮಿಗಳ ಸಹಕಾರದಿಂದ ಕಳೆದ ೧೫ ವರ್ಷಗಳಿಂದ ಈ ಕಾರ್ಯವನ್ನು ನಿರಂತರವಾಗಿ ಮುನ್ನಡೆಸಲಾಗುತ್ತಿದೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್.ಎನ್. ಕಾಮತ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಜ್ಞಾನ ಹಾಗೂ ಕೌಶಲ್ಯಗಳ ಜೊತೆಗೆ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಯಶಸ್ಸು ಸಾಧಿಸಬೇಕು. ಕದಳಿಶ್ರೀ ವೇದಿಕೆಯ ಇಂತಹ ಕಾರ್ಯಕ್ರಮಗಳು ಮಕ್ಕಳ ಶಿಕ್ಷಣಕ್ಕೆ ಸ್ಫೂರ್ತಿ ತುಂಬುತ್ತಿವೆ ಎಂದರು.
ವಿಜಯ ಪತ್ತಾರ ಹಾಗೂ ಲತೇಶ ಹೆಬಸೂರ ಪ್ರಾರ್ಥಿಸಿದರು. ಎಸ್.ಜಿ. ಕಂಠಿ ಸ್ವಾಗತಿಸಿದರು. ವಿ.ಎಂ. ಚರಂತಿಮಠ ನಿರೂಪಿಸಿದರು. ಅನಿಲ ನಡುವಿನಮನಿ ವಂದಿಸಿದರು. ಸವಿತಾ ಹರದಾಳಮಠ, ಶೈನಜ್ ಕಳಸದ, ಲಲಿತಾ ತಳವಾರ, ಶಿಕ್ಷಕರು ಹಾಗೂ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
“ವಿದ್ಯಾರ್ಥಿ ಜೀವನವು ಜ್ಞಾನ ಪಡೆಯುವುದರ ಜೊತೆಗೆ ಉತ್ತಮ ಮೌಲ್ಯಗಳು ಹಾಗೂ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ಪ್ರಮುಖ ಹಂತ. ಮಕ್ಕಳು ಆದರ್ಶ ಬದುಕನ್ನು ರೂಪಿಸಿಕೊಂಡು ಸಮಾಜದಲ್ಲಿ ಮೌಲ್ಯಾಧಾರಿತ ವ್ಯಕ್ತಿಗಳಾಗಿ ಬೆಳೆಯಬೇಕು. ಮಕ್ಕಳಿಗೆ ಸಿಹಿ ಭೋಜನದ ಜೊತೆಗೆ ನೈತಿಕ ಹಾಗೂ ಮಾನವೀಯ ಮೌಲ್ಯಗಳ ಅರಿವು ಮೂಡಿಸುತ್ತಿರುವ ಕದಳಿಶ್ರೀ ವೇದಿಕೆಯ ಕಾರ್ಯ ಅತ್ಯಂತ ಮಹತ್ವದ್ದಾಗಿದೆ.”
— ಪ್ರೊ. ಪ್ರೇಮಲತಾ ಹಿರೇಮಠ



