ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5 ಸಾವಿರ ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದ್ದು, ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಶುಕ್ರವಾರ ನಡೆದ KKRDB ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈಗ ಅನುಮೋದನೆಯಾದ ಟೆಂಡರ್ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು. ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು.
ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು. ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25ರಷ್ಟು ಅನುದಾನ ವೆಚ್ಚ ಮಾಡಲು, ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದು, ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅಲ್ಲದೆ, ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.



