ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ವಿವಿಧ ನಗರ ಯೋಜನಾ ಪ್ರಾಧಿಕಾರಗಳು/ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶನಗಳನ್ನು ಬ್ಲಾಕ್ ಕಾಂಗ್ರೆಸ್ ಕಛೇರಿ ನಿರ್ಮಾಣ ಮಾಡುವ ಸಲುವಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಾರುಕಟ್ಟೆ ಮೌಲ್ಯದ ಶೇ. 5ರಷ್ಟಕ್ಕೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.
ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದ ಬಗ್ಗೆ ಸೂಕ್ತ ತಯಾರಿ, ಸಂಬಂಧಿಸಿದವರಿಗೆ ಉತ್ತರ ಒದಗಿಸುವುದನ್ನು ಗಂಭೀರವಾಗಿ ಪರಿಗಣಿಸುವುದು, ಚರ್ಚೆಗಳ ಕುರಿತು ಮಾಡಿಕೊಳ್ಳಬೇಕಾಗಿರುವ ಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿಗಳು ಸಲಹೆ-ಸೂಚನೆ, ಮಾರ್ಗದರ್ಶನ ನೀಡಿದರು.
ಮೆಕ್ಕೆಜೋಳದ ಬಗ್ಗೆ ರೈತರಿಗೆ ತೊಂದರೆಯಾಗುತ್ತಿದ್ದು, ಮೆಕ್ಕೆಜೋಳವನ್ನು ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. 17,500 ಲಕ್ಷ ಎಕರೆ ಭೂಮಿಯಲ್ಲಿ 55 ಲಕ್ಷ ಟನ್ ಮೆಕ್ಕೆಜೋಳ ಬೆಳೆದಿದೆ. ಎಥನಾಲ್ ಕಾರ್ಖಾನೆಗಳು 7.50 ಲಕ್ಷ ಟನ್ನ್ನು ಖರೀದಿಸಬೇಕಾಗಿದೆ. ಎಂ.ಎಸ್.ಪಿ ದರ 2400 ರೂ.ಗಳಿಗೆ ಖರೀದಿಸಬೇಕು. 2639 ರೂ.ಗಳನ್ನು ನೀಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಯಲ್ಲಿ ಎಥನಾಲ್ ಫ್ಯಾಕ್ಟರಿಯವರು ಸರ್ಕಾರದ ಜೊತೆ ಚರ್ಚಿಸಿ 239 ರೂ.ಗಳನ್ನು ರಾಜ್ಯ ಸರ್ಕಾರ ನೀಡಿದರೆ, ರೈತರಿಗೆ 2400 ನೀಡಬೇಕೆಂದು ಸೂಚಿಸಲಾಗಿತ್ತು. ಕೆಲವರು ಇಂಡೆಂಟ್ ಕೊಟ್ಟಿದ್ದಾರೆ, ಕೆಲವರು ಕೊಟ್ಟಿಲ್ಲ. ಇಂಡೆಂಟ್ ಕೊಟ್ಟಿಲ್ಲದವರಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಇದರ ಜೊತೆಗೆ ಕೆಎಂಎಫ್ ಅವರು 50 ಸಾವಿರ ಮೆ.ಟನ್ ಖರೀದಿಸಬೇಕು. ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮಾರುಕಟ್ಟೆಯಲ್ಲಿ ಸ್ಥಿರತೆ ಸಾಧ್ಯವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ ಸಭೆಗೆ ತಿಳಿಸಿದರು.
ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಡಿ `ಕರ್ನಾಟಕ ಒಳನಾಡು ನೌಕೆ ನಿಯಮಗಳು-2025’ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣವನ್ನು ರೂ. 304.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.



