ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು, ಪೋಷಕರು ಸೇರಿದಂತೆ ಇಂದಿನ ಯುವಜನತೆಯ ಸಹಕಾರ ಅತ್ಯವಶ್ಯವಾಗಿದೆ ಎಂದು ಮುಖ್ಯಶಿಕ್ಷಕ ಎಸ್.ಎನ್. ಹೂಲಗೇರಿ ಹೇಳಿದರು.
ಪಟ್ಟಣದ ಶ್ರೀ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ ಎಂದು ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂನ್ 26ರಂದು ಆಚರಿಲಾಗುತ್ತದೆ. ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಟದಂತಹ ಪ್ರಕರಣಗಳು ಕಂಡು ಬಂದರೆ ತತ್ಕ್ಷಣ ಪೋಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಮಕ್ಕಳು ಮಾದಕ ವಸ್ತು ವಿರೋಧಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸುವದರ ಜೊತೆಗೆ ಮಾದಕ ವಸ್ತು ವಿರೋಧಿಸುವ ಘೋಷ ವಾಕ್ಯಗಳೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು. ಎ.ಟಿ. ಮಳ್ಳಳ್ಳಿ, ಎಂ.ಎಸ್. ಅತ್ತಾರ, ಬಿ.ಡಿ. ಯರಗೊಪ್ಪ, ಕೆ.ಸಿ. ಜೋಗಿ, ಎಸ್.ಶಿವಮೂರ್ತಿ, ಎಸ್. ಸಂಶಿಹಿರೇಮಠ, ಎಸ್.ಎಫ್. ಧರ್ಮಾಯತ, ಆರ್.ಎಂ. ಗುಳಬಾಳ, ಜ್ಯೋತಿ ಪೂಜಾರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.