ವಿಜಯಸಾಕ್ಷಿ ಸುದ್ದಿ, ಧಾರವಾಡ : ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾದಕ ವಸ್ತು, ಅಕ್ರಮ, ಅನೈತಿಕತೆಗಳನ್ನು ಮನುಷ್ಯರ ಮನಸ್ಥಿತಿ ಬದಲಾಗದೇ ತಡೆಯುವುದು ಕಷ್ಟ ಸಾಧ್ಯವಾಗುತ್ತದೆ. ಸಮಾಜ ಶಾಂತಿಯಿಂದ ಇರಲು ಸಾರ್ವಜನಿಕ ಸಹಕಾರ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಪಿ.ಎಫ್. ದೊಡ್ಡಮನಿ ಹೇಳಿದರು.
ಅವರು ಬುಧವಾರ ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತು ಮಾರಾಟ, ಸೇವನೆ ಅಪರಾಧವಾಗಿದ್ದರೂ ಕೆಲವು ಸಮಾಜಘಾತುಕ ಶಕ್ತಿಗಳು ಇದನ್ನು ವೃತ್ತಿಯಾಗಿ ಮಾಡಿಕೊಂಡಿವೆ. ಪೊಲೀಸ್ ಹಾಗೂ ಇತರ ಶಿಕ್ಷಾ ಸಂಸ್ಥೆಗಳಿದ್ದರೂ ಅವರಿಗೆ ಭಯವಿಲ್ಲ.
ಕಾಯ್ದೆ, ಕಾನೂನುಗಳ ಜೊತೆಗೆ ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಇಂತಹ ಹೀನ ಕೃತ್ಯಗಳನ್ನು ನಿಯಂತ್ರಿಸಿ, ಮಟ್ಟ ಹಾಕಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ, ಅಕ್ರಮ ಮಾರಾಟ ಹೆಚ್ಚಳವಾಗುತ್ತಿದೆ. ಸಾಮಾಜಿಕ ಕಟ್ಟೆಚ್ಚರ ಮುಖ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ, ಸಂಘ, ಸಂಸ್ಥೆಗಳಲ್ಲಿ ಮತ್ತು ಮಹಿಳಾ ಗುಂಪುಗಳಲ್ಲಿ ಮಹಿಳೆ ಮತ್ತು ಮಕ್ಕಳ ಮಾರಾಟದ ಬಗ್ಗೆ, ಅಕ್ರಮ ಸಾಗಾಣಿಕೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ಮಾದಕ ವಸ್ತು ವ್ಯಸನಿ ತನ್ನ ಮಾನ, ಪ್ರಾಣ ಮತ್ತು ಆಸ್ತಿ ಹಾನಿ ಮಾಡಿಕೊಳ್ಳುತ್ತಾನೆ. ಇದರ ಅರಿವು ಇಲ್ಲದೆ ಮಕ್ಕಳು, ಯುವಕರು ಮಾದಕ ವಸ್ತು ಸೇವನೆಗೆ ಒಳಗಾಗುತ್ತಿದ್ದಾರೆ. ಇದನ್ನು ತಡೆಗಟ್ಟಬೇಕು. ಸಾರ್ವಜನಿಕರು, ವಿದ್ಯಾರ್ಥಿಗಳು ಯಾವುದೇ ಅಕ್ರಮ ಚಟುವಟಿಗಳು ತಮ್ಮ ಗಮನಕ್ಕೆ ಬಂದ ತಕ್ಷಣ 112 ಸಹಾಯವಾಣಿಗೆ ಕರೆ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಮಾತನಾಡಿ, ಯುವ ಸಮೂಹ ಮತ್ತು ವಿದ್ಯಾರ್ಥಿಗಳ ಜಾಗೃತಿಗಾಗಿ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಾದಕ ವಸ್ತು ಸೇವನೆಯ ವ್ಯಸನಿಗಳಾದ ಜನರನ್ನು ಆ ಮಾನಸಿಕ ಸ್ಥಿತಿಯಿಂದ ಹೊರ ತರಲು ವ್ಯಸನಮುಕ್ತ ಕೇಂದ್ರಗಳನ್ನು ತೆರೆಯಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಮಾನಸಿಕ ಚಿಕಿತ್ಸೆ ಹಾಗೂ ಸಮಾಲೋಚನಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಪರಶುರಾಮ ಎಫ್.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಚಿತ್ತರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಮಂಜುನಾಥ. ಎಸ್., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರವೀಂದ್ರ ಬೊವೇರ ಹಾಗೂ ಧಾರವಾಡ ತಾಲೂಕು ವೈದ್ಯಾಧಿಕಾರಿ ಡಾ. ಕೆ.ಎನ್. ತನುಜಾ ಇದ್ದರು. ಎಂ.ಎನ್. ಅಗಡಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ವಿವಿಧ ಶಾಲೆ, ಕಾಲೇಜುಗಳ ಪ್ರಾಚಾರ್ಯರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.