`ಮಾನವ ಸರಪಳಿ’ ಅರ್ಥಪೂರ್ಣವಾಗಿರಲಿ : ಗೋವಿಂದರೆಡ್ಡಿ

0
International Democracy Day
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇದೇ ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಹಮ್ಮಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

Advertisement

ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್‌ನಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆಪ್ಟೆಂಬರ್ 15ರ ಮುಂಜಾನೆ 9 ಗಂಟೆಗೆ ಹಾವೇರಿಯ ಬಾಳೆಹೊಸುರದಿಂದ ಕೊಪ್ಪಳದವರೆಗೆ ಏಕಕಾಲಕ್ಕೆ ಮಾನವ ಸರಪಳಿ ಕಾರ್ಯಕ್ರಮ ಜರಗಲಿದ್ದು, ಗದಗ ಜಿಲ್ಲೆಯ ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ ತಾಲೂಕಿನಲ್ಲಿ ಮಾನವ ಸರಪಳಿ ಹಾದು ಹೋಗಲಿದೆ. ಪ್ರತಿ ಕಿಲೋಮೀಟರ್‌ಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಿ, ಮುಖ್ಯ ವೃತ್ತಗಳಲ್ಲಿ ತೋರಣ, ಬ್ಯಾನರ್ ಹಾಕಿಸಿ ಮಾನವ ಸರಪಳಿ ನಿರ್ಮಿಸಿ 100 ಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಸೇರಿಸಿ ಸಂವಿಧಾನದ ಪೀಠಿಕೆ ಓದಿಸಿ, ರಾಷ್ಟçಗೀತೆಯನ್ನು ಹಾಡಿಸಬೇಕು ಎಂದು ಸೂಚಿಸಿದರು.

ತಾಲೂಕಿನ ತಹಸೀಲ್ದಾರರು ಮತ್ತು ತಾ.ಪಂ ಕಾರ್ಯನಿರ್ವಾಹಕರನ್ನು ಒಳಗೊಂಡು ಸಂಪೂರ್ಣ ಯೋಜನೆ ಜೊತೆಗೆ ಸೂಕ್ಷ್ಮ ಯೋಜನೆ ತಯಾರಿಸಿ ಮಾನವ ಸರಪಳಿ ಹಾದುಹೋಗುವ ಗ್ರಾಮ ಸೇರಿದಂತೆ, 10 ಕಿ.ಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಾಮ ಸಭೆಯನ್ನು, ಗ್ರಾಮದ ಶಾಲೆಗಳಲ್ಲಿ ಸಭೆಯನ್ನು ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು, ಅಧಿಕಾರಿ-ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಪಿಡಿಓ, ನರೇಗಾ, ಗ್ರಾಮ ಪಂಚಾಯತ್ ಅಧಿಕಾರಿ- ಸಿಬ್ಬಂದಿಗಳು ಅವಶ್ಯಕ ಪೂರ್ವಸಿದ್ಧತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ತಾಲೂಕಿನ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ಹಾದು ಹೋಗುವಾಗ ವಾಹನ ದಟ್ಟಣೆ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳ ಸುರಕ್ಷತೆಯೆಡೆ ಗಮನ ವಹಿಸಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಮಾನವ ಸರಪಳಿಯ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಟಕ್ಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ವಿವಿಧ ತಾಲೂಕಿನ ತಹಸೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ ಮಾತನಾಡಿ, ಪೊಲೀಸ್ ಇಲಾಖೆಯ ಪಿಎಸ್‌ಐ, ಡಿವಾಯ್‌ಎಸ್‌ಪಿ ಮತ್ತು ಸಂಚಾರಿ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಮಾನವ ಸರಪಳಿಗೆ ಸಂಪೂರ್ಣ ಬಂದೋಬಸ್ತ್ ಒದಗಿಸಲಾಗುವುದು ಎಂದು ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಗ್ರಾಮ ಮತ್ತು ತಾಲೂಕುಗಳಲ್ಲಿರುವ ವಿವಿಧ ಸಂಘಟನೆಗಳ ಮತ್ತು ಸ್ವ-ಸಹಾಯ ಗುಂಪುಗಳ ಜೊತೆ ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರು, ಪದಾಧಿಕಾರಿಗಳು, ಮತ್ತು ಸಾರ್ವಜನಿಕರನ್ನು ಸೇರಿಸಬೇಕು. ಮಾನವ ಸರಪಳಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಮನ ನೀಡಿ, ಮಕ್ಕಳನ್ನು ಕರೆತರುವ ಮತ್ತು ಕಳಿಸುವ ವ್ಯವಸ್ಥೆ ಸರಿಯಾಗಿ ಆಗಬೇಕು ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here