ವಿಜಯಸಾಕ್ಷಿ ಸುದ್ದಿ, ಗದಗ: ಶೈಕ್ಷಣಿಕ ಸುಧಾರಣೆಯ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಒಂದಕಿ ಸ್ಥಾನವನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮವಹಿಸಬೇಕೆಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ಗದಗ ಜಿಲ್ಲಾ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕುರಿತ ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಬಂದಾಗ ಮುಜುಗರಕ್ಕೆ ಈಡಾಗುವ ಸಂದರ್ಭ ಬರುತ್ತದೆ. ನಮ್ಮ ಶಿಕ್ಷಣದ ಕುರಿತು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಶಿಕ್ಷಕರು ಪ್ರಾಮಾಣಿಕವಾಗಿ ಹಾಗೂ ಗಂಭೀರವಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಕರ ಕಾರ್ಯಕ್ರಮದ ಪಟ್ಟಿ ಗಮನಿಸಿದರೆ ಎಲ್ಲಾ ಶಿಕ್ಷಕರು ಸಮಯ ಮೀರಿ ಕೆಲಸ ಮಾಡುತ್ತಿದ್ದಾರೆ. ಶಾಲೆಗಳನ್ನು ಅಧಿಕಾರಿಗಳಿಗೆ ದತ್ತು ನೀಡಲಾಗಿದೆ, ಅಧಿಕಾರಿಗಳು ಮಾರ್ಗದರ್ಶನ ನೀಡಿ ಶಿಕ್ಷಣದ ಗುಣಮಟ್ಟವನ್ನು ಸುಧಾರಣೆ ಮಾಡಬೇಕು. ತಾಲೂಕುವಾರು, ವಿಷಯವಾರು ಸಭೆ ಸಂಘಟನೆ ಮಾಡಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಕಲಿಯುವ ಅವಶ್ಯಕತೆ ಇರುವ ಮಕ್ಕಳು ಖಂಡಿತವಾಗಿ ಶಾಲೆಗೆ ತಪ್ಪದೇ ಬರುತ್ತಾರೆ. ಶಿಕ್ಷಕರು ಆಸಕ್ತಿಯಿಂದ ಪಾಠ ಮಾಡಲು ಅನುಕೂಲಕರ ವಾತಾವರಣ ನಿರ್ಮಿಸಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ಮೂಲ ಸಮಸ್ಯೆಗಳನ್ನು ಕಂಡುಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಶಿಕ್ಷಕರು ಮಾನಸಿಕವಾಗಿ ನೆಮ್ಮದಿಯಿಂದ ಇದ್ದಾಗ ಮಾತ್ರ ಉತ್ತಮ ಪಾಠ ಬೋಧನೆ ಆಗುತ್ತದೆ. ಮಕ್ಕಳು ಹಿರಿಯರಿಗೆ ಗೌರವ ನೀಡುವಂತಹ ಸಂಸ್ಕಾರಯುತ ಶಿಕ್ಷಣವನ್ನು ಪಡೆಯುವಂತಾಗಬೇಕು ಎಂದರು.
ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಎಸ್.ಪಟ್ಟಣಶೆಟ್ಟರ ಕಾರ್ಯಾಗಾರದ ಕುರಿತು ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿ ದಂಡಿನ, ವಿದ್ಯಾದಾನ ಶಿಕ್ಷಣ ಸಮಿತಿ ಅಧ್ಯಕ್ಷ ಧೀರೇಂದ್ರ ಹುಯಿಲಗೋಳ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಬಿವೃದ್ಧಿ) ಜಿ.ಎಲ್. ಬಾರಾಟಕ್ಕೆ, ಡಾ. ಶರಣು ಗೋಗೇರಿ, ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕರು ಹಾಜರಿದ್ದರು.