ಬೆಂಗಳೂರು: ಐಪಿಎಲ್ ಸೀಸನ್-19ರ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಾಗಿತ್ತು. ಆದರೆ ಗುಜರಾತ್ ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ಕರ್ನಾಟಕದಿಂದ ಕಿತ್ತುಕೊಂಡಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಐಪಿಎಲ್ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಿತ್ತು. ಆದಾಗ್ಯೂ, ಅಂತಿಮವಾಗಿ ಪಂದ್ಯವನ್ನು ಗುಜರಾತ್ಗೆ ವರ್ಗಾಯಿಸಲಾಗಿದೆ. ಇದು ನಮ್ಮ ರಾಜ್ಯದ ಕ್ರೀಡಾಭಿಮಾನಿಗಳಿಗೆ ಮತ್ತು ಕ್ರೀಡಾ ಮೂಲಸೌಕರ್ಯಕ್ಕೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಫೈನಲ್ ಪಂದ್ಯ ಕರ್ನಾಟಕದಲ್ಲೇ ನಡೆಯಬೇಕಿತ್ತು. ಅದಕ್ಕಾಗಿ ನಾವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೆವು. ಆದರೆ ಗುಜರಾತ್ ತನ್ನ ಪ್ರಭಾವ ಬಳಸಿಕೊಂಡು ಪಂದ್ಯವನ್ನು ತನ್ನತ್ತ ಸೆಳೆದಿದೆ. ನಮ್ಮ ಸ್ಟೇಡಿಯಂಗೆ ಮಾತ್ರವಲ್ಲ, ರಾಜ್ಯದ ಯುವಕರಿಗೂ ಇದರಿಂದ ಅನ್ಯಾಯವಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೆಂಗಳೂರು ದೇಶದ ಪ್ರಮುಖ ಕ್ರೀಡಾ ಕೇಂದ್ರಗಳಲ್ಲಿ ಒಂದಾಗಿದ್ದು, ದೊಡ್ಡ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಎಲ್ಲ ರೀತಿಯ ಸಾಮರ್ಥ್ಯ ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ, ಐಪಿಎಲ್ 2026ರ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.
ಆರ್ಸಿಬಿ ಕರ್ನಾಟಕದ ಹೆಸರಿನಲ್ಲಿ ಆಡುತ್ತಿರುವ ತಂಡ. ತಂಡದ ಆಟಗಾರರು ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕರ್ನಾಟಕ ಸರ್ಕಾರದ ಪರವಾಗಿ ಹಾಗೂ ರಾಜ್ಯದ ಕೋಟ್ಯಂತರ ಅಭಿಮಾನಿಗಳ ಪರವಾಗಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. ಆರ್ಸಿಬಿ ಸಾಧನೆ ರಾಜ್ಯದ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ಕ್ಷಣವಾಗಿದ್ದು, ಮುಂದಿನ ದಿನಗಳಲ್ಲಿಯೂ ತಂಡ ಇದೇ ರೀತಿ ಯಶಸ್ಸಿನ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.



