ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರ ಗತಿಯನ್ನ ಪಡೆದುಕೊಂಡಿವೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾಗೆ ಆಗಮಿಸಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಆಯ್ಕೆಗೂ ಮುನ್ನ ಅಮಿತ್ ಶಾ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ ಅವರನ್ನು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸ್ವಾಗತಿಸಿದರು. ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾ, “ಬಂಗಾಳ ಜನರು ಬಿಜೆಪಿಗೆ ನೀಡಿರುವ ಬೆಂಬಲಕ್ಕೆ ಕೃತಜ್ಞತೆಗಳು. ಜನರ ನಿರೀಕ್ಷೆಗಳನ್ನು ಈಡೇರಿಸಲು ಪಕ್ಷ ಬದ್ಧವಾಗಿದೆ” ಎಂದು ಹೇಳಿದರು.
ಈ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದೊಳಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರ ಆಯ್ಕೆ ನಡೆಯಲಿದ್ದು, ಸಂಜೆ ವೇಳೆಗೆ ಸಿಎಂ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿರುವ ಈ ಬೆಳವಣಿಗೆ ಮೇಲೆ ದೇಶದ ಗಮನ ನೆಟ್ಟಿದೆ.



