ವಿಜಯಸಾಕ್ಷಿ ಸುದ್ದಿ, ನರಗುಂದ: ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿ ಆ ದೇಶದ ಕಾರ್ಮಿಕರನ್ನು ಅವಲಂಬಿಸಿದೆ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಶ್ರಮಜೀವಿಗಳ ಕೆಲಸದ ಕೊಡುಗೆಯನ್ನು ಗೌರವಿಸುವ ಹಾಗೂ ಅವರ ಕಷ್ಟಗಳನ್ನು ಸ್ಮರಿಸಲು ಪ್ರತಿವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದು ಪಿಡಿಒ ಮಂಜುನಾಥ ಗಣಿ ಹೇಳಿದರು.
ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ದುಡಿಯೋಣ ಬಾ, ಸ್ತ್ರೀ ಚೇತನ ಅಭಿಯಾನ ಹಾಗೂ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ನಿರಂತರ ಕೆಲಸ ಕೊಡುವ ಇಲಾಖೆ ಆರ್ಡಿಪಿಆರ್ ಇಲಾಖೆ. ಅದು ನರೇಗಾ ಯೋಜನೆಯಾಗಿದ್ದು, ಕೊಟ್ಯಾಂತರ ಅಕುಶಲ ಕೂಲಿ ಕಾರ್ಮಿಕರು ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಮೇ 1ರಿಂದ ದುಡಿಯೋಣ ಬಾ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಮಹಿಳೆಯರ ಅಭ್ಯುದಯಕ್ಕಾಗಿ ಸ್ತ್ರೀ ಚೇತನ ಅಭಿಯಾನ ಕೈಗೊಂಡಿದ್ದು, ಅಕುಶಲ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕು. ಕೊಣ್ಣೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ 100 ದಿನಗಳ ಕೆಲಸ ನೀಡಲಾಗುತ್ತದೆ. ಈಗಾಗಲೇ 13 ದಿನಗಳ ಕೆಲಸ ನೀಡಲಾಗಿದೆ. ಮಳೆ ಬರುವವರೆಗೂ ನಿರಂತರ ಕೆಲಸ ನೀಡಲಾಗುತ್ತದೆ. ಕೂಲಿಕಾರರು ಗ್ರಾ.ಪಂ ಸಹಕಾರದೊಂದಿಗೆ ಕೆಲಸ ಪಡೆಯಬೇಕು ಎಂದರು.
ವಿಶ್ವ ಕಾರ್ಮಿಕ ದಿನದ ಅಂಗವಾಗಿ ಮಹಿಳಾ ಕೂಲಿ ಕಾರ್ಮಿಕರು ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಕಾರ್ಮಿಕ ದಿನದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು, ನರೇಗಾ ಹಾಗೂ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಕಾರ್ಮಿಕರು ಹಗಲು-ರಾತ್ರಿ, ಬಿಸಿಲು-ಮಳೆ ಎನ್ನದೆ ಸಮರ್ಪಣಾ ಭಾವದಿಂದ ಕಠಿಣ ಶ್ರಮವಹಿಸಿ ದುಡಿಯುತ್ತಾರೆ. ಹೀಗೆ ದುಡಿಯುವ ಕಾರ್ಮಿಕ ವರ್ಗದವರ ಕೆಲಸ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಡಿಒ ಮಂಜುನಾಥ ಗಣಿ ಹೇಳಿದರು.



