ವಿಜಯಸಾಕ್ಷಿ ಸುದ್ದಿ, ಧಾರವಾಡ: ವಿಕಲಚೇತನತೆ ಎಂಬುದು ದೌರ್ಬಲ್ಯವಲ್ಲ. ಅವರಲ್ಲಿ ವಿಶೇಷ ಚೈತನ್ಯ, ಕೌಶಲ್ಯ ಇರುತ್ತದೆ. ಆತ್ಮಸ್ಥೈರ್ಯದಿಂದ ಸಾಧನೆಗೆ ಮುಂದಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಹೇಳಿದರು.
ಅವರು ಗುರುವಾರ ಬೆಳಿಗ್ಗೆ ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಕಲಚೇತನರ ಕ್ರೀಡಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರಿಗೆ ಅಗತ್ಯವಾದ ಸಹಾಯ, ಪ್ರೋತ್ಸಾಹ, ಸೌಲಭ್ಯಗಳನ್ನು ಒದಗಿಸುವುದು ಸರ್ಕಾರ ಮತ್ತು ಸಮಾಜದ ಜವಾಬ್ದಾರಿ. ಕೇವಲ ದಯೆ ಅಥವಾ ಕರುಣೆಯ ದೃಷ್ಟಿಯಿಂದ ನೋಡದೇ, ಅವರಲ್ಲಿರುವ ಕೌಶಲ್ಯ, ಪ್ರತಿಭೆ, ಹಾಗೂ ಸಾಮರ್ಥ್ಯಗಳನ್ನು ಗುರುತಿಸಿ, ವೇದಿಕೆ ಕಲ್ಪಿಸುವುದು ಮುಖ್ಯ ಎಂದು ಅವರು ಹೇಳಿದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ ಬಸೀರ್ ಅಹಮ್ಮದ ಜಮಾದಾರ ಮಾತನಾಡಿ, ವಿಕಲಚೇತನರ ಸಾಮರ್ಥ್ಯಕ್ಕೆ ವೇದಿಕೆ ಕಲ್ಪಿಸುವುದು ಸಮಾಜದ ಎಲ್ಲರ ಕರ್ತವ್ಯ. ಅವರನ್ನು ಪ್ರೋತ್ಸಾಹಿಸುವ ಮನೋಭಾವ ಎಲ್ಲರಿಗೂ ಸ್ಫೂರ್ತಿದಾಯಕವಾದದ್ದು ಎಂದು ಹೇಳಿದರು.
ವೇದಿಕೆಯಲ್ಲಿ ಮಜೇಥಿಯಾ ಫೌಂಡೇಶನ್ ಸಿಇಓ ಡಾ. ಸುನೀಲಕುಮಾರ ಕುಕನೂರ, ವಿಶ್ವಧರ್ಮ ಸಮೂಹ ಸಂಸ್ಥೆಯ ಕಾರ್ಯದರ್ಶಿ ಐ.ಕೆ. ಲಕ್ಕುಂಡಿ, ಪ್ರಿಯದರ್ಶಿನಿ ಶ್ರವಣ ನ್ಯೂನತೆಯುಳ್ಳ ಮಕ್ಕಳ ಶಾಲೆಯ ಅಧ್ಯಕ್ಷ ಡಿ.ಡಿ. ಮೆಚ್ಚಣ್ಣವರ, ವಿಶ್ವಧರ್ಮ ಬುದ್ಧಿಮಾಂದ್ಯ ಮಕ್ಕಳ ಶಾಲೆಯ ಅಧೀಕ್ಷಕ ಗುರು ಲಕ್ಕುಂಡಿ ಹಾಗೂ ಸರ್ಕಾರಿ ಅಂಧ ಮಕ್ಕಳ ಶಾಲೆಯ ಅಧೀಕ್ಷಕ ಎಂ.ಆರ್. ಸಾಬೋಜಿ ಇದ್ದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹುಬ್ಬಳ್ಳಿ ಸರ್ಕಾರಿ ಅಂಧ ಬಾಲಕರ ಶಾಲೆಯ ಶಿಕ್ಷಕ ಅಣ್ಣಪ್ಪ ಕೋಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



