ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ಆಗಿ ರಾಜೀನಾಮೆ ಘೋಷಿಸಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣದಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಇನ್ನೂ ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೇ ನೀಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಗದೀಪ್ ಧನ್ಖರ್ ಅವರಿಗೆ ಭಾರತದ ಉಪ ರಾಷ್ಟ್ರಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು ದೇಶಕ್ಕೆ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳು ಸಿಕ್ಕಿವೆ. ಉತ್ತಮ ಆರೋಗ್ಯ ಅವರದ್ದಾಗಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಜಗದೀಪ್ ಧನಕರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದ ಅವರು 1989ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. ಇವರು 1951ರಲ್ಲಿ ಮೇ 18ರಂದು ರಾಜಸ್ಥಾನದ ಝಂಝನು ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದರು. ತಂದೆ ದಿ. ಗೋಕಲ್ ಚಂದ್, ತಾಯಿ ದಿ. ಕೇಸರಿ ದೇವಿ. ರಾಜಸ್ಥಾನದ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿಯೂ ಜಗದೀಪ್ ಧನಕರ್ ಸೇವೆ ಸಲ್ಲಿಸಿದ್ದಾರೆ.
ಧನಕರ್ 1989ರಲ್ಲಿ ರಾಜಸ್ಥಾನದ ಝಂಝನು ಕ್ಷೇತ್ರದಿಂದ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 1993-1998ರಲ್ಲಿ ಅಜ್ಮೀರ್ ಜಿಲ್ಲೆಯ ಕಿಶಾನ್ಗರ್ಗ್ ಕ್ಷೇತ್ರದ ಶಾಸಕರಾಗಿದ್ದರು. 1990ರಲ್ಲಿ ಕೇಂದ್ರ ಸಚಿವರಾಗಿದ್ದರು. ರಾಜಸ್ಥಾನ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷರೂ ಆಗಿದ್ದರು. ಆರಂಭದಲ್ಲಿ ಕಾಂಗ್ರೆಸ್ನಲ್ಲಿದ್ದ ಅವರು ಬಳಿಕ ಬಿಜೆಪಿ ಸೇರಿದ್ದರು. 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಕವಾಗಿದ್ದರು.