ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಜಿಗಳೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ₹14 ಲಕ್ಷ ಮಂಜೂರು ಮಾಡಿ ಗದಗ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಿರುವುದನ್ನು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಸ್ವಾಗತಿಸಿದೆ. ಸರ್ಕಾರ ಹಾಗೂ ಸ್ಥಳೀಯ ಶಾಸಕರಿಗೆ ಅಭಿನಂದನೆ ಸಲ್ಲಿಸಿರುವ ಸಂಘ, ಪರಿಹಾರದ ಮೊತ್ತವನ್ನು ಸಂತ್ರಸ್ತ ಕುಟುಂಬಗಳಿಗೆ ತ್ವರಿತವಾಗಿ ತಲುಪಿಸುವಂತೆ ಆಗ್ರಹಿಸಿದೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳು ಹಾಗೂ ಗಾಯಗೊಂಡವರ ಕುಟುಂಬಗಳು ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೆಲವರು ಚಿಕಿತ್ಸೆಗಾಗಿ ಹಣ ಹೊಂದಿಸಲು ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮಂಜೂರು ಮಾಡಿರುವ ಪರಿಹಾರದ ಮೊತ್ತವು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಉಳಿಯದೆ, ಅರ್ಹ ಫಲಾನುಭವಿಗಳ ವೈಯಕ್ತಿಕ ಖಾತೆಗಳಿಗೆ ಶೀಘ್ರವಾಗಿ ಜಮೆಯಾಗಬೇಕಾಗಿದೆ ಎಂದು ಸಂಘ ತಿಳಿಸಿದೆ.
ಪರಿಹಾರ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ, ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡಬಾರದು. ಪರಿಹಾರದ ಹಣ ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಲಭ್ಯವಾದರೆ, ಚಿಕಿತ್ಸಾ ವೆಚ್ಚ ಹಾಗೂ ಕುಟುಂಬದ ತುರ್ತು ಅಗತ್ಯಗಳನ್ನು ಪೂರೈಸಲು ಅನುಕೂಲವಾಗಲಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.
ಸರ್ಕಾರ ಈಗಾಗಲೇ ಪರಿಹಾರ ಮಂಜೂರು ಮಾಡಿರುವುದರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಅಗತ್ಯವಿಲ್ಲ. ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಅರ್ಹ ಎಲ್ಲ ಕುಟುಂಬಗಳ ಖಾತೆಗೆ ಪರಿಹಾರದ ಮೊತ್ತ ಜಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಆಗ್ರಹಿಸಿದೆ.
ಈ ಕುರಿತು ಸಂಘದ ಕಾರ್ಯದರ್ಶಿ ಎಂ.ಎಸ್. ಹಡಪದ ಹಾಗೂ ಮುಖಂಡರಾದ ಬಾಲು ರಾಠೋಡ, ಪೀರು ರಾಠೋಡ, ಫಯಾಜ್ ತೋಟದ, ದಾವಲಸಾಬ ತಾಳಿಕೋಟಿ, ರಾಜಪ್ಪ ಹೊಸಮನಿ, ಮೆಹಬೂಬ್ ಹುನಗುಂದ, ರಾಜಣ್ಣ ಕೇಶಣ್ಣವರ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.



