ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ (93) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 9 ಗಂಟೆಗೆ ಅವರು ಅಸುನೀಗಿದ್ದಾರೆ ಎಂದು ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ.
1933ರ ಸೆಪ್ಟೆಂಬರ್ 12ರಂದು ಜನಿಸಿದ ರಾಮಯ್ಯ ಅವರು ಕನ್ನಡನಾಡಿನ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದವರಾಗಿದ್ದರು. ಸುಮಾರು ಐದು ದಶಕಗಳ ಕಾಲ ‘ದಿ ಹಿಂದೂ’ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, 45 ವರ್ಷಗಳ ಕಾಲ ಬ್ಯೂರೋ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದರು. ಸತ್ಯನಿಷ್ಠೆ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಅವರಿಗೆ ‘ಹಿಂದೂ ರಾಮಯ್ಯ’ ಎಂಬ ಗುರುತೂ ಸಿಕ್ಕಿತ್ತು.
ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿನ ತಮ್ಮ ವಿಶಾಲ ಸಂಪರ್ಕಗಳನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಿಕೊಂಡಿದ್ದರು. ಅವರ ಅನುಭವಕಥನ “ನಾನು ಹಿಂದೂ ರಾಮಯ್ಯ” ಕೃತಿ, ಪತ್ರಿಕೋದ್ಯಮದ ಮೇಲಿನ ಅವರ ತಪಸ್ಸಿನ ಪ್ರತಿಬಿಂಬವಾಗಿದೆ.
ಅವರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಆದಿಚುಂಚನಗಿರಿ ಮಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಾಗೂ ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಮತ್ತು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿಗಳಲ್ಲೂ ಸಕ್ರಿಯರಾಗಿದ್ದರು.
ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವಿದ್ದಾರೆ. ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದ 295/12/1, 7ನೇ ಮೇನ್, 16ನೇ ಕ್ರಾಸ್ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಸೋದರಳಿಯ ಹಾಗೂ ಬಾಹ್ಯಾಕಾಶ-ರಕ್ಷಣಾ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ತಿಳಿಸಿದ್ದಾರೆ.



