ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಅವರನ್ನು ಕೇಂದ್ರ ಸರ್ಕಾರ ನೇಮಿಸಿದ್ದು, ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ನ್ಯಾ.ವಿಭು ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್ಎಲ್ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.
ನ್ಯಾ. ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್ 18ರಂದು ಕಾಯಂಗೊಂಡಿದ್ದರು.