ಬೆಂಗಳೂರಿನಲ್ಲಿ ನಡೆದ ಥಗ್ ಲೈಫ್ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ನೀಡಿರುವ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸುತ್ತಿದೆ. ಈ ಬೆನ್ನಲ್ಲೇ ಕಮಲ್ ಕ್ಷಮೆ ಕೇಳುವಂತೆ ಸಾಕಷ್ಟು ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಕಮಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಕ್ಷಮೆ ಕೇಳಲ್ಲ ಎಂದಿದ್ದರು. ಇದೀಗ ಕನ್ನಡಿಗರ ಆಕ್ರೋಶ ಮತ್ತಷ್ಟು ಹೆಚ್ಚಾಗಿದ್ದು ಕಮಲ್ ಹಾಸನ್ ಭಾವಚಿತ್ರದ ಬ್ಯಾನರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಕಮಲ್ ಹಾಸನ್ ಬ್ಯಾನರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾತ್ರೋ ರಾತ್ರಿ ಓರ್ವ ಕನ್ನಡಾಭಿಮಾನಿ ಕಮಲ್ ಹಾಸನ್ ಹೇಳಿಕೆಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಕಮಲ್ ಹಾಸನ್ ಅವರ ಭಾವಚಿತ್ರದ ಬ್ಯಾನರ್ಗೆ ಬೆಂಕಿ ಹಚ್ಚಿ ಕಿಡಿಕಾರಿದ್ದಾರೆ.
ಫೋಟೋಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ನೀರು ಹಾಕಿ ಬ್ಯಾನರ್ನ್ನು ರಸ್ತೆಯಿಂದ ತೆಗೆದು ಹಾಕಿದ್ದಾರೆ.
ಮೇ 27ರಂದು `ಥಗ್ ಲೈಫ್’ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು.
ವಿವಾದದ ಹಿನ್ನೆಲೆ:
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಜೂ.೫ರಂದು ರಿಲೀಸ್ ಆಗಲಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಚಿತ್ರತಂಡ ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿ ಹಮ್ಮಿಕೊಂಡಿದ್ದು. ಈ ವೇಳೆ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿದ್ದರು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಕಮಲ್ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು. ಇಲ್ಲವಾದಲಿ ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಆಗಲು ಬಿಡುವುದಿಲ್ಲ ಎಂದು ಹಲವು ಸಂಘಟನೆಗಳು ಪಟ್ಟು ಹಿಡಿದಿವೆ. ಆದರೆ ಕಮಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ.