ವಿಜಯಸಾಕ್ಷಿ ಸುದ್ದಿ, ರೋಣ: ಆರ್ಥಿಕ ವರ್ಷದ ಅಂತ್ಯಕ್ಕೆ ಕೇವಲ ಎರಡು ತಿಂಗಳು ಮಾತ್ರ ಬಾಕಿಯಿದ್ದು, ರೋಣ ತಾಲೂಕಿನ 22 ಗ್ರಾಮ ಪಂಚಾಯಿತಿಗಳಲ್ಲಿ ಫೆಬ್ರವರಿ 1ರಿಂದ 28ರವರೆಗೆ ಒಂದು ತಿಂಗಳ ಕಾಲ ನಿರಂತರ ಕರವಸೂಲಿ ಮಾಸಾಚರಣೆ ಅಭಿಯಾನವನ್ನು ಹಮ್ಮಿಕೊಂಡು ಶೇ. 100ರಷ್ಟು ತೆರಿಗೆ ವಸೂಲಿ ಸಾಧಿಸಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಗ್ರಾ.ಪಂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಕುರಿತು ತಾಲೂಕಿನ ಕಾರ್ಯ ನಿರ್ವಾಹಕ ಕಚೇರಿಯಲ್ಲಿ ಸಿಬ್ಬಂದಿಗಳ ಜೊತೆ ಸಭೆ ನಡೆಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆಬ್ರವರಿ ತಿಂಗಳ ಸಂಪೂರ್ಣ ಅವಧಿಯಲ್ಲಿ ತಾಲೂಕಿನ ಎಲ್ಲಾ ಗ್ರಾ.ಪಂಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆಯವರೆಗೂ ತೆರಿಗೆ ವಸೂಲಾತಿ ಕಾರ್ಯವನ್ನು ತೀವ್ರಗೊಳಿಸಬೇಕು ಎಂದು ತಿಳಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರವಸೂಲಿಗಾರರು, ಗಣಕಯಂತ್ರ ನಿರ್ವಾಹಕರು, ವಾಟರ್ಮನ್ಗಳು, ಸಿಪಾಯಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಒಂದೇ ತಂಡವಾಗಿ ಕಾರ್ಯನಿರ್ವಹಿಸಿ ಗರಿಷ್ಠ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಬೇಕು ಎಂದು ಸೂಚಿಸಿದ್ದಾರೆ.
ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಎಲ್ಲಾ ಆಸ್ತಿ ಮಾಲೀಕರನ್ನು ಗುರುತಿಸಿ ತಕ್ಷಣವೇ ನೋಟೀಸ್ ಜಾರಿ ಮಾಡಬೇಕು. ಪಂಚತಂತ್ರ 2.0 ತಂತ್ರಾಂಶದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಬಾಕಿಯಿರುವ ಸಂಪೂರ್ಣ ತೆರಿಗೆ ಮೊತ್ತವನ್ನು ಫೆಬ್ರವರಿ ತಿಂಗಳೊಳಗೆ ವಸೂಲಿ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಬಾಕಿ ಉಳಿಸಿಕೊಂಡಿರುವ ಕನಿಷ್ಠ 200 ಆಸ್ತಿ ಮಾಲೀಕರಿಗೆ ತಗಾದೆ ನೋಟೀಸ್ ಜಾರಿ ಮಾಡಿ, ಅಭಿಯಾನದ ಅವಧಿಯಲ್ಲೇ ಸಂಪೂರ್ಣ ತೆರಿಗೆ ವಸೂಲಿ ಮಾಡಬೇಕು. ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಮೊಬೈಲ್ ಟವರ್ ಕಂಪನಿಗಳು, ಅಂಗಡಿ ಮಾಲೀಕರು, ಉದ್ಯಮಿಗಳು ಹಾಗೂ ಸರ್ಕಾರಿ ನೌಕರರಿಂದ ಶೇ. 100ರಷ್ಟು ತೆರಿಗೆ ಬಾಕಿ ವಸೂಲಿ ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕರವಸೂಲಿ ಅಭಿಯಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛ ವಾಹಿನಿ ಹಾಗೂ ಡಂಗೂರ ಸಾರುವ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಜೊತೆಗೆ ಅಭಿಯಾನದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಸಕ್ರಿಯವಾಗಿ ಭಾಗಿಯಾಗಿಸಿಕೊಂಡು, ವಾರ್ಡ್ವಾರು ಸಾರ್ವಜನಿಕರನ್ನು ಮನವೊಲಿಸಿ ತೆರಿಗೆ ಪಾವತಿಗೆ ಪ್ರೇರೇಪಿಸುವಂತೆ ಸೂಚಿಸಿದ್ದಾರೆ.
ರೋಣ ತಾಲೂಕಿನಲ್ಲಿ ಶೇ. 100ರಷ್ಟು ತೆರಿಗೆ ವಸೂಲಿ ಸಾಧಿಸುವ ಉದ್ದೇಶದಿಂದ ಫೆಬ್ರವರಿ 1ರಿಂದ 28ರವರೆಗೆ ತಾಲೂಕಿನ 22 ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿ ಮಾಸಾಚರಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ಗ್ರಾ.ಪಂನ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಿ ತೆರಿಗೆ ವಸೂಲಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಅಭಿಯಾನದ ವೇಳೆ ಯಾವುದೇ ಸಿಬ್ಬಂದಿಗಳಿಗೆ ರಜೆ ಇರುವುದಿಲ್ಲ. ಅನಧಿಕೃತವಾಗಿ ಗೈರು ಹಾಜರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
-
ಚಂದ್ರಶೇಖರ ಬಿ.ಕಂದಕೂರ.
ಕಾರ್ಯನಿರ್ವಾಹಕ ಅಧಿಕಾರಿಗಳು,
ತಾ.ಪಂ-ರೋಣ.



