ಬೆಂಗಳೂರು:- ಕರ್ನಾಟಕದಲ್ಲಿ ತೆರವಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದ ಉಪಚುನಾವಣೆ ಇಂದು ನಡೆಯಲಿದೆ. ರಾಜ್ಯದಲ್ಲಿ ನಡೆಯಲಿರುವ ಮೂರು ಕ್ಷೇತ್ರದ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದ್ದು, ವಿರೋಧ ಪಕ್ಷದಲ್ಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಆಡಳಿತಾರೂಢ ಕಾಂಗ್ರೆಸ್ಗೆ ಈ ಉಪ ಚುನಾವಣೆ ಬಹಳ ಮಹತ್ವದ್ದಾಗಿದೆ.
ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿಂದ ಸಿಪಿ ಯೋಗೇಶ್ವರ್ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚನ್ನಪಟ್ಟಣದಲ್ಲಿ ಒಟ್ಟು 2,32,949 ಮತದಾರರಿದ್ದು, ಈ ಪೈಕಿ 1,12,324 ಪುರುಷ ಮತದಾರರು, 1,20,617 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 276 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 119 ಮತಗಟ್ಟೆಗಳನ್ನ ಸೂಕ್ಷ್ಮ ಮತಗಟ್ಟೆಗಳು ಎಂದು ನಿರ್ಧರಿಸಲಾಗಿದೆ.
ಚನ್ನಪಟ್ಟಣದಲ್ಲಿ ಒಕ್ಕಲಿಗ ಮತಗಳ ಪ್ರಾಬಲ್ಯವಿದೆ. 1.05 ಲಕ್ಷದಷ್ಟಿರುವ ಒಕ್ಕಲಿಗ ಮತಗಳೇ ನಿರ್ಣಾಯಕವಾಗಿದೆ. 40 ಸಾವಿರ ಪರಿಶಿಷ್ಟ ಪಂಗಡ, 32 ಸಾವಿರ ಮುಸ್ಲಿಂ, 21 ಸಾವಿರ ಹಿಂದುಳಿದ ವರ್ಗ, 8 ಸಾವಿರ ಕುರುಬ, 10 ಸಾವಿರಕ್ಕೂ ಹೆಚ್ಚು ಇತರೆ ಮತಗಳಿವೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್ನಿಂದ ಯಾಸೀರ್ ಖಾನ್ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.