ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ : ದಿವ್ಯ ಪ್ರಭು

0
Karnataka Rajyotsava pre-preparatory meeting
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಪ್ರತೀ ವರ್ಷದಂತೆ ನವೆಂಬರ್ 1ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಅವರು ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ನವೆಂಬರ್ 1ರಂದು ಬೆಳಿಗ್ಗೆ 8.30ಕ್ಕೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಮತ್ತು ಸರ್ಕಾರಿ ನೌಕರರು ಉಪಸ್ಥಿತರಿರಬೇಕು. 8.55ಕ್ಕೆ ಮುಖ್ಯ ಅತಿಥಿಗಳಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕ್ರೀಡಾಂಗಣಕ್ಕೆ ಆಗಮಿಸುವರು.
ನಂತರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡುವರು. 9.30 ಗಂಟೆಗೆ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸುವರು ಎಂದು ತಿಳಿಸಿದರು.
ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೆ ಧಾರವಾಡ ಜಿಲ್ಲಾ ಕೇಂದ್ರದ ಎಲ್ಲ ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಾಂಕಾರ ಮಾಡಬೇಕು. ರಾಜ್ಯೋತ್ಸವ ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ ಮತ್ತು ಭಾಗವಹಿಸುವ ವಿದ್ಯಾರ್ಥಿಗಳಿಗೆ ಅಲ್ಪೋಪಹಾರದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿ  ಇದ್ದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಎಂ.ಎನ್. ಭೀಮಪ್ಪ, ರಾಜ್ಯ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಲೋಕೋಪಯೋಗಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಅಗ್ನಿಶಾಮಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಿ ಯಶಸ್ವಿಗೊಳಿಸಲು ವಿವಿಧ ಇಲಾಖೆಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರತಿ ಇಲಾಖೆಯು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತ್ತು ತಮ್ಮ ಇಲಾಖೆಗಳ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. 

Spread the love
Advertisement

LEAVE A REPLY

Please enter your comment!
Please enter your name here