ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್ಬಿವೈ) ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. 2024–25ನೇ ಸಾಲಿನಲ್ಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿರುವುದಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರವನ್ನು ಅಭಿನಂದಿಸಿದೆ.
ಬೆಂಗಳೂರಿನಲ್ಲಿ ಆಯೋಜಿಸಲಾದ 13ನೇ ರಾಷ್ಟ್ರೀಯ ಸಮ್ಮೇಳನದಲ್ಲಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಗೌರವವು ರಾಜ್ಯದ ರೈತಪರ ನೀತಿಗಳು ಹಾಗೂ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ದೊರೆತ ಮಹತ್ವದ ಮಾನ್ಯತೆಯಾಗಿದೆ.
ರಾಜ್ಯದಲ್ಲಿ ಒಟ್ಟು 27,04,166 ರೈತರು ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದು, ಇವರಲ್ಲಿ 11,85,642 ರೈತರು ವಿಮಾ ಪರಿಹಾರಕ್ಕಾಗಿ ಕ್ಲೇಮ್ ಸಲ್ಲಿಸಿದ್ದಾರೆ. ಈ ಮೂಲಕ ಒಟ್ಟು ₹2,094 ಕೋಟಿ ಮೊತ್ತದ ಪರಿಹಾರ ವಿತರಿಸಲಾಗಿದೆ. ನೈಸರ್ಗಿಕ ವಿಕೋಪಗಳು ಹಾಗೂ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸಮಯಕ್ಕೆ ಸರಿಯಾಗಿ ಪರಿಹಾರ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.
ಕೇಂದ್ರ ಕೃಷಿ ಇಲಾಖೆಯು ಕರ್ನಾಟಕ ಸರ್ಕಾರದ ರೈತಪರ ದೃಷ್ಟಿಕೋನ, ಪರಿಣಾಮಕಾರಿ ಆಡಳಿತ ಮತ್ತು ಯೋಜನೆಗಳ ಸಮರ್ಥ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯಲ್ಲಿ ಉತ್ತಮ ಕಾರ್ಯಕ್ಷಮತೆ ಮುಂದುವರಿಸಬೇಕೆಂದು ಶುಭ ಹಾರೈಸಿದೆ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಮುಂಗಾರು ಬೆಳೆಗೆ ಶೇ. 2 ಮತ್ತು ಹಿಂಗಾರು ಬೆಳೆಗೆ ಶೇ. 1.5 ರಷ್ಟು ಮಾತ್ರ ಪ್ರೀಮಿಯಂ ಪಾವತಿಸಬೇಕಾಗುತ್ತದೆ. ಉಳಿದ ಪ್ರೀಮಿಯಂ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ. ಈ ಯೋಜನೆ ರೈತರ ಆದಾಯ ರಕ್ಷಣೆ ಹಾಗೂ ಆರ್ಥಿಕ ಭದ್ರತೆಗೆ ಮಹತ್ವದ ಸಹಕಾರ ನೀಡುತ್ತಿದೆ.



