ಜನವರಿ 22ರಿಂದ ಆರಂಭವಾಗಲಿರುವ ರಣಜಿ ಟ್ರೋಫಿ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಕರ್ನಾಟಕ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಅನುಭವಿ ಆಟಗಾರ ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ.
ಆದರೆ ಮೊದಲ ಸುತ್ತಿನ ಪಂದ್ಯಗಳಲ್ಲಿ ಕರ್ನಾಟಕ ಪರ ಆಡಿದ್ದ ಯುವ ಆಟಗಾರ ಸ್ಮರಣ್ ರವಿಚಂದ್ರನ್ ಈ ಬಾರಿ ತಂಡದಿಂದ ಹೊರಗುಳಿದಿದ್ದಾರೆ. ವಿಜಯ ಹಝಾರೆ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಸ್ಮರಣ್ ಅವರಿಗೆ ಭುಜಕ್ಕೆ ಗಾಯವಾಗಿದ್ದ ಕಾರಣ, ಅವರು ಆ ಪಂದ್ಯದಲ್ಲೂ ಕಣಕ್ಕಿಳಿಯಲಾಗಿರಲಿಲ್ಲ.
ಅದೇ ಗಾಯದ ಹಿನ್ನೆಲೆಯಲ್ಲಿ ಸ್ಮರಣ್ ರವಿಚಂದ್ರನ್ ಅವರನ್ನು ರಣಜಿ ಟ್ರೋಫಿ ತಂಡದಿಂದ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ. ಅವರ ಬದಲಾಗಿ ಈ ಬಾರಿ ನಿಕಿನ್ ಜೋಸ್ ಅವರಿಗೆ ಕರ್ನಾಟಕ ರಣಜಿ ತಂಡದಲ್ಲಿ ಅವಕಾಶ ನೀಡಲಾಗಿದೆ.
ರಣಜಿ ಟ್ರೋಫಿಯ ಮಹತ್ವದ ಹಂತದಲ್ಲಿ ಕರ್ನಾಟಕ ತಂಡಕ್ಕೆ ಈ ಬದಲಾವಣೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಕ್ರಿಕೆಟ್ ಅಭಿಮಾನಿಗಳು ಕಾದು ನೋಡುತ್ತಿದ್ದಾರೆ.
ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಕರುಣ್ ನಾಯರ್, ಕೆಎಲ್ ಶ್ರೀಜಿತ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ವಿದ್ಯಾಧರ್ ಪಾಟೀಲ್, ವಿದ್ವತ್ ಕಾವೇರಪ್ಪ, ಅಭಿಲಾಷ್ ಶೆಟ್ಟಿ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೃತಿಕ್ ಕೃಷ್ಣ, ಕೆವಿ ಅನೀಶ್, ಎಂ. ವೆಂಕಟೇಶ್.



