ಬೆಂಗಳೂರು:- ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳ ತನಿಖೆಗೆ SIT ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ. ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ ಸಿಂಗ್ ಅವರ ನೇತೃತ್ವದಲ್ಲಿ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಬಿಕೆ ಸಿಂಗ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್ ಹಾಗೂ ಎಸ್ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ.
ಇನ್ನೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೆ. 18ರಂದು ಸುದ್ದಿಗೋಷ್ಠಿ ನಡೆಸಿದ್ದು, ಮತ ಕಳ್ಳತನದ ಆರೋಪದ ಕುರಿತು ಹೊಸ ಬಾಂಬ್ ಸಿಡಿಸಿದ್ದರು. ಕಳೆದ ಬಾರಿ ಬೆಂಗಳೂರು ಸೆಂಟ್ರಲ್ನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಅರೋಪ ಮಾಡಿದ್ದ ರಾಹುಲ್ ಗಾಂಧಿ, ಬಳಿಕ ಕಲಬುರ್ಗಿಯ ಆಳಂದದಲ್ಲೂ ಭಾರೀ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದಾರೆ. ಕರ್ನಾಟಕದ ಆಳಂದ ಕ್ಷೇತ್ರದ ಬಗ್ಗೆ ರಾಹುಲ್ ಉಲ್ಲೇಖ ಮಾಡಿದ್ದು, 6018 ಮತಗಳ ಕಳ್ಳತನ ಆಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಈ ಆರೋಪದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗ ಶಾಮೀಲಾಗಿದೆ ಎಂದು ಆರೋಪ ಮಾಡಿದ್ದರು. ಇದೀಗ ಮಹದೇವಪುರ ಮತ್ತು ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ.