ನವದೆಹಲಿ: ತಮಿಳು ನಟ ದಳಪತಿ ವಿಜಯ್ರ ರಾಜಕೀಯ ಱಲಿ. 40 ಅಮಾಯಕ ಜನರನ್ನು ಬಲಿ ಪಡೆದಿದೆ. ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಬಂದಿದ್ದವರು ಮಸಣ ಸೇರಿದ್ದು, ಕರೂರಲ್ಲಿ ನೀರವ ಮೌನ ಆವರಿಸಿದೆ. ಕರೂರು ಕಾಲ್ತುಳಿತ ಪ್ರಕರಣ ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದು,
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.
ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿದೆ. ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆ ಎಂದಿರುವ ಕೋರ್ಟ್, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್ನ ಆದೇಶದಿಂದ ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಎಲ್ಲಾ ರೀತಿಯ ಗೊಂದಲಗಳನ್ನ ನಿವಾರಿಸಲು ನಾವು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಸ್ಥಳೀಯರಲ್ಲದ ಇಬ್ಬರು ಐಪಿಎಸ್ ಅಧಿಕಾರಿಗಳು ಸಮಿತಿಯ ಭಾಗವಾಗಿರಲಿದ್ದಾರೆ. ನಿವೃತ್ತ ನ್ಯಾಯಾಧೀಶರ ನಿರ್ದೇಶನಗಳ ಪ್ರಕಾರ ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನ ರೂಪಿಸಬೇಕು. ಇದರೊಂದಿಗೆ ತನಿಖೆಯ ಮಾಸಿಕ ವರದಿಯನ್ನು ಸಿಬಿಐ ಸಮಿತಿ ಮುಂದಿಡಬೇಕು ಎಂದು ಸಹ ಕೋರ್ಟ್ ಹೇಳಿದೆ.