ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೆಪ್ಟೆಂಬರ್ 20ರಂದು ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಿಕ್ಕುಳಿದ ವೃಂದದ ಅಭ್ಯರ್ಥಿಗಳಿಗೆ ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಈ ವೃಂದದಲ್ಲಿ ಒಟ್ಟು 1,42,912 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ. ಈ ವೃಂದದಲ್ಲಿ 38,332 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಕೆಇಎ ಸೂಚಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ ಮೂಲಕ ಕಣ್ಗಾವಲು ಇರಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ವೆಬ್ಕಾಸ್ಟಿಂಗ್ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

