ಬೆಂಗಳೂರು: ಗ್ಯಾಸ್ ಕೊರತೆ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಸ್ಪಷ್ಟನೆ ನೀಡಬೇಕು ಮತ್ತು ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹೋಟೆಲ್ಗಳಲ್ಲಿ ಸಿಲಿಂಡರ್ ಕೊರತೆ ಉಂಟಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ನಿನ್ನೆ ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಆದೇಶ ಹೊರಡಿಸಿದೆ ಎಂದು ಹೇಳಿದರು. ಇವು ಇಂದು ಡಿಸ್ಟ್ರಿಬ್ಯೂಟರ್ಗಳಿಗೆ ತಲುಪಲಿದ್ದು, ನಾಳೆಯಿಂದ ಹೋಟೆಲ್ಗಳಿಗೆ ವಿತರಣೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ನಾವು ತಿಳಿಸಿದಂತೆ 17,500 ಸಿಲಿಂಡರ್ಗಳನ್ನು ಹೋಟೆಲ್ಗಳಿಗೆ ಪೂರೈಸಲಾಗುತ್ತದೆ. ಹೀಗಾಗಿ ಯಾರೂ ಆತಂಕಪಡಬೇಕಾಗಿಲ್ಲ ಎಂದು ಭರವಸೆ ನೀಡಿದ್ದಾರೆ.
ಇನ್ನೂ ಕೇಂದ್ರ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ ಮುನಿಯಪ್ಪ, “ಹಿಂದೆ ಬೇಕಾದಷ್ಟು ಕಮರ್ಷಿಯಲ್ ಗ್ಯಾಸ್ ಬಳಸಿ ಎಂದು ಹೇಳಿದ್ದ ಕೇಂದ್ರ, ಈಗ ಏಕಾಏಕಿ ಪೂರೈಕೆಯನ್ನು ನಿಲ್ಲಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಗ್ಯಾಸ್ ಕೊರತೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಈ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ್ದೇ ಎಂದು ಸ್ಪಷ್ಟಪಡಿಸಿದರು.



