ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಜೀವನದ ಕೆಲವು ಸಮಸ್ಯೆಗಳಿಗೆ ನಾವು ನಡೆದು ಬಂದ ದಾರಿ ಹಾಗೂ ತೆಗೆದುಕೊಂಡ ನಿರ್ಧಾರಗಳೇ ಕಾರಣವಾಗಿರುತ್ತವೆ. ಅನುಭವದಿಂದ ಸಿಗುವ ಜ್ಞಾನ ಸಂಪತ್ತು ಓದಿನಿಂದ ಸಿಗುವುದಿಲ್ಲವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಕೈಗೊಂಡ 34ನೇ ವರ್ಷದ ತಪೋನುಷ್ಠಾನ ಹಾಗೂ `ಶ್ರೀ ಜಗದ್ಗುರು ರೇಣುಕ ವಿಜಯ’ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮಾನವೀಯತೆ ಎಂಬುದು ಆಕಾಶದಷ್ಟು ವಿಸ್ತಾರ. ಸಮುದ್ರದಷ್ಟೇ ವಿಶಾಲ. ಕೆಲವು ಹನಿಗಳು ಅಪವಿತ್ರಗೊಂಡರೆ ಸಮುದ್ರವೇ ಅಪವಿತ್ರವಾಗುವುದಿಲ್ಲ. ಸಂಕಷ್ಟಗಳನ್ನು ಎದುರಿಸಿದ ಮನುಷ್ಯ ಜೀವನದಲ್ಲಿ ಉನ್ನತಿ ಹೊಂದಲು ಸಾಧ್ಯ. ಗಾಢಾಂಧಕಾರದಲ್ಲಿ ಮುಳುಗಿದ ಮನುಷ್ಯನನ್ನು ಎಚ್ಚರಿಸಿ ಜಾಗೃತಿ ಉಂಟು ಮಾಡಿದ ಶ್ರೇಯಸ್ಸು ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ವೀರಶೈವ ಧರ್ಮ ಆದರ್ಶ ಮೌಲ್ಯಗಳನ್ನು ಉಳಿಸಿ ಬೆಳೆಸಿಕೊಂಡು ಬರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದರು.
ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನದಲ್ಲಿ ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಹುಟ್ಟು-ಸಾವು ನಮ್ಮ ಕೈಯಲ್ಲಿ ಇಲ್ಲ. ಆದರೆ ಬದುಕು ಮಾತ್ರ ನಮ್ಮ ಕೈಯಲ್ಲಿದೆ. ನದಿ, ಸಮುದ್ರಗಳನ್ನು ಸೇತುವೆ ಮೂಲಕ, ಗುಡ್ಡ-ಬೆಟ್ಟಗಳನ್ನು ಸುರಂಗ ಮಾರ್ಗ ನಿರ್ಮಿಸಿ ದಾಟಬಹುದು. ಆದರೆ ಮನದ ಮಧ್ಯೆ ನಿರ್ಮಾಣಗೊಂಡ ಸ್ವಾರ್ಥದ ಗೋಡೆಗಳನ್ನು ದಾಟುವುದು ಸುಲಭದ ಕೆಲಸವಲ್ಲ ಎಂದರು.
ಸಮಾರಂಭದಲ್ಲಿ ಆಲಮೇಲ ಚಂದ್ರಶೇಖರ ಶಿವಾಚಾರ್ಯರು, ಹನುಮಾಪುರ ಡಾ. ಸೋಮಶೇಖರ ಶಿವಾಚಾರ್ಯರು, ಅಹಿರಸಂಗದ ಮಲ್ಲಿಕಾರ್ಜುನ ಶಿವಾಚಾರ್ಯರು, ತೊಗರ್ಸಿ ಮಳೆಮಠದ ಮಹಾಂತ ಶಿವಾಚಾರ್ಯರು, ನೀಲೂರು ಹಿರೇಮಠದ ಶಿವಬಸವ ಶಿವಾಚಾರ್ಯರು ಮತ್ತು ಹುಡುಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.
ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ವಿಠಲಾಪುರ ಹಿರೇಮಠದ ಗಂಗಾಧರ ಸ್ವಾಮಿಗಳಿಂದ ಪ್ರಾರ್ಥನೆ ಜರುಗಿತು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.