ಕೊಪ್ಪಳ:- ಜಿಲ್ಲೆಯಲ್ಲಿ ಕೆಲವು ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹುಳಗಳು ಪತ್ತೆಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿ ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಅಕ್ಷರ ದಾಸೋಹ ಜಿಲ್ಲಾ ಅಧಿಕಾರಿ ಅನಿತಾ ಹಾಗೂ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಗುಡಿ ಮತ್ತು ಮಹಾಂತಯ್ಯ ಸೊಪ್ಪಿಮಠ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಕೊಪ್ಪಳ ತಾಲೂಕಿನ ನೃಪತುಂಗ ಶಾಲೆ, ನಿಂಗಾಪೂರ ಶಾಲೆ ಹಾಗೂ ಕುಷ್ಟಗಿ ತಾಲೂಕಿನ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಬಿಸಿಯೂಟದಲ್ಲಿ ಹುಳಗಳು ಕಂಡುಬಂದಿದ್ದು, ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಬೆನ್ನಲ್ಲೇ ಶಿಕ್ಷಣ ಇಲಾಖೆ ಉಪನಿರ್ದೇಶಕರಿಂದ ತನಿಖಾ ವರದಿ ಪಡೆದುಕೊಂಡು, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಈ ಅಮಾನತು ಕ್ರಮ ಜರುಗಿಸಲಾಗಿದೆ.



