ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಪ್ರಯಾಣಿಕರ ಪ್ರಾಣ ಕಾಪಾಡಲು ಬಸ್ ನಿಲ್ಲಿಸಿ, ಬಳಿಕ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತ ಚಾಲಕನಾಗಿದ್ದು, ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು. ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಅವರು ತಕ್ಷಣವೇ ಬಸ್ಸನ್ನು ಹೆದ್ದಾರಿಯಲ್ಲಿ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ.
ಇದರಿಂದ ಸಂಭಾವ್ಯ ಅಪಘಾತ ತಪ್ಪಿದ್ದು, ಪ್ರಯಾಣಿಕರು ಬಚಾವಾಗಿದ್ದಾರೆ. ಕೂಡಲೇ ಆ್ಯಂಬುಲೆನ್ಸ್ಗೆ ಕರೆ ಮಾಡಲಾಯಿತಾದರೂ, ಅದು ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ರಾಜೀವ್ ಬಿರಾದಾರ್ ಅಸುನೀಗಿದರು. ಪ್ರಾಣ ಹೋಗುವ ನೋವಿನಲ್ಲೂ ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕನಿಗೆ ಜನ ಕಂಬನಿ ಮಿಡಿದಿದ್ದಾರೆ.



