ರಾಮನಗರ: ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ಭೀಕರ ಅಪಘಾತ ಸಂಭವಿಸಿ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್ಪೆಕ್ಟರ್ ನಾಗರಾಜು ಮೃತ ದುರ್ದೈವಿಯಾಗಿದ್ದು,
ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ ಹತ್ತಿಸಿದ್ದಾನೆ. ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



