ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ಹಸ್ತಾಂತರ: MB ಪಾಟೀಲ್!

0
Spread the love

ಬೆಂಗಳೂರು:- ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ಹಸ್ತಾಂತರ ಮಾಡಲಾಗಿದೆ ಎಂದು MB ಪಾಟೀಲ್ ಹೇಳಿದ್ದಾರೆ.

Advertisement

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಅದರಂತೆ ಸರ್ಕಾರಿ ಆದೇಶವನ್ನೂ‌ ಹೊರಡಿಸಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ ಎಂದಿದ್ದಾರೆ.

ಒಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು. ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್​ಗೆ ಹೋಯಿತು.

ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ, ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ. ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ.

ಹಿಂದಿನ ಬಿಜೆಪಿ ಸರಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂ ಇತ್ತು ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here