ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ. 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರಿನ ಲೋಕಾಯುಕ್ತ ಕಚೇರಿಗೆ ಸರ್ಕಾರಿ ವಾಹನದ ಬದಲು ಖಾಸಗಿ ಕಾರ್ ಬಳಸಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ಅಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು. ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಈ ವೇಳೆ ಜತೆಗಿದ್ದರು. ಆ ಬಳಿಕ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಒಬ್ಬರೇ ಆಗಮಿಸಿದ ಸಿಎಂ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು KA 04 MV 7666 ನಲ್ಲಿ ಆಗಮಿಸಿದರು.
ಮುಡಾ ಹಗರಣವು ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಬಂದಿರುವ ಆರೋಪವಾಗಿದೆ. ಇದು ವಯಕ್ತಿಕ ಪ್ರಕರಣ ಆಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ವಾಹನ ಬಳಸಿಕೊಂಡು ತೆರಳುವುದು ಅಧಿಕಾರ ದುರುಪಯೋಗ ಅಥವಾ ಸರ್ಕಾರಿ ಸೌಲಭ್ಯ ವಯಕ್ತಿಕ ಕೆಲಸಕ್ಕೆ ಬಳಕೆ ಮಾಡಿದಂತಾಗುತ್ತದೆ. ಇಂತಹ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಶಿಸ್ತು ಕಾಪಾಡಿಕೊಂಡು ಬಂದಿದ್ದು,
ಈಗಲೂ ಅದನ್ನೇ ಪಾಲನೆ ಮಾಡಿದ್ದಾರೆ. ಜತೆಗೆ ಸಿದ್ದರಾಮಯ್ಯನವರ ಆಪ್ತ ವಲಯವು ಖಾಸಗಿ ವಾಹನ ಬಳಸುವಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯ ಸನಿಹದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ನೂರಾರು ಸಂಖ್ಯೆಯ ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ.