ವಿಜಯಸಾಕ್ಷಿ ಸುದ್ದಿ, ಧಾರವಾಡ : ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತೆಡಯಲು ಎಲ್ಲರೂ ಗಮನ ಹರಿಸುವುದು ಅತೀ ಅವಶ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು.
ಅವರು ಗುರುವಾರ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098ರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಸತಿ ನಿಲಯದ ನಿಲಯ ಪಾಲಕರಿಗೆ ಮಕ್ಕಳ ರಕ್ಷಣೆಗಾಗಿ ಇರುವ ಬಾಲ ನ್ಯಾಯ ಕಾಯ್ದೆ-2015, ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ 2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ರಕ್ಷಣಾ ನೀತಿ-2016, ಮಕ್ಕಳ ಸಹಾಯವಾಣಿ-1098 ಹಾಗೂ ಮಕ್ಕಳಿಗೆ ಸಂಬಂಧಪಟ್ಟ ವಿವಿಧ ಕಾನೂನುಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ನೈತಿಕತೆ ಕಡಿಮೆಯಾಗುತ್ತಿದ್ದು, ಇದನ್ನು ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು. ಇಂದಿನ ಆಧುನಿಕ ದಿನಗಳಲ್ಲಿಯೂ ಜನರಲ್ಲಿ ಮೌಢ್ಯತೆ ಹೆಚ್ಚಾಗಿದ್ದು, ಅದನ್ನು ಹೋಗಲಾಡಿಸುವಲ್ಲಿ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಬೇಧ-ಭಾವದ ಮನೋಭಾವನೆ ದೂರವಾಗಬೇಕು. 18 ವರ್ಷದ ಒಳಗಿನ ಯಾವುದೇ ಮಗು ಕೆಲಸಕ್ಕೆ ಸೇರದೇ ಶಾಲೆಯಲ್ಲಿ ತನ್ನ ಬಾಲ್ಯವನ್ನು ಕಳೆಯಬೇಕು. ಈ ನಿಟ್ಟಿನಲ್ಲಿ ಸದರಿ ಕಾರ್ಯಕ್ರಮವು ತುಂಬಾ ಉಪಯುಕ್ತವಾಗಿದ್ದು, ಶಿಬಿರಾರ್ಥಿಗಳು ಇದರ ಮಾಹಿತಿ ಪಡೆದು ಮಕ್ಕಳ ಹಕ್ಕುಗಳ ರಕ್ಷಣೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳಿಗೋಸ್ಕರ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗಳು ಕಾರ್ಯನಿರ್ವಹಿಸುತ್ತಿದ್ದು, ತೊಂದರೆಗೆ ಒಳಗಾದ ಮಕ್ಕಳನ್ನು ಸಮಿತಿ ಮುಂದೆ ಹಾಜರುಪಡಿಸಿ ಮಕ್ಕಳಿಗೆ ನ್ಯಾಯ ಒದಗಿಸುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.
ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಇರುವ ವಿವಿಧ ಕಾಯ್ದೆ ಹಾಗೂ ಕಾನೂನುಗಳ ಕುರಿತು ಉಪನ್ಯಾಸವನ್ನು ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (ಪ್ರಭಾರ) ಜಿಲ್ಲಾ ಅಧಿಕಾರಿ ಗೋಪಾಲ ಎಚ್.ಲಮಾಣಿ ಉಪಸ್ಥಿತರಿದ್ದರು. ತಹಸೀಲ್ದಾರ ಮಹ್ಮದ ಅಲಿ ಕಾಯಕ್ರಮ ನಿರೂಪಿಸಿದರು. ಕರೆಪ್ಪ ಕೌಜಲಗಿ ವಂದಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಹೆಚ್.ಹೆಚ್. ಕುಕನೂರ ಮಾತನಾಡಿ, ಮಕ್ಕಳು ಓದಿನಲ್ಲಿ ಹಿಂದಿರುವ ಅಥವಾ ಮನೆಯಲ್ಲಿ ತೊಂದರೆ ಇರುವಂತಹ ಮಕ್ಕಳ ಕಡೆಗೆ ಹೆಚ್ಚು ಗಮನಹರಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಸೇರಿಸುವುದು ಅತೀ ಅವಶ್ಯವಾಗಿದೆ ಎಂದರು.