ವಿಜಯಸಾಕ್ಷಿ ಸುದ್ದಿ, ಗದಗ: ನಿರಂತರವಾಗಿ ಸಾರ್ವಜನಿಕರ ಸೇವೆಯನ್ನು ನಿಷ್ಪಕ್ಷವಾಗಿ ಮಾಡುವ ಮೂಲಕ ನಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸೋಣ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶದ ಹಲವು ಮಹನೀಯರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಅದನ್ನು ಸರಿಯಾಗಿ ಅನುಭವಿಸುವ ಮೂಲಕ ಸರ್ಕಾರಿ ನೌಕರರಾದ ನಾವೆಲ್ಲ ಸಾರ್ವಜನಿಕರ ಸೇವೆಗೆ ನಿರಂತರವಾಗಿ ಶ್ರಮಿಸೋಣ ಎಂದರು.
ಸಮ ಸಮಾಜ ನಿರ್ಮಾಣಕ್ಕಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ಆಶಯ ಈಡೇರಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಅದನ್ನು ಸರಿಯಾಗಿ, ಕರ್ತವ್ಯ ಶ್ರದ್ಧೆಯ ಮೂಲಕ ನಾವೆಲ್ಲರೂ ನಿಭಾಯಿಸೋಣ ಎಂದು ತಿಳಿಸಿದರು.
ಲಕ್ಷಾಂತರ ಮಹನೀಯರು ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಮೂಲಕ ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟಿದ್ದಾರೆ. ಇದರಲ್ಲಿ ಗದಗ ಜಿಲ್ಲೆಯ ಹಲವಾರು ಮಹನೀಯರು ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ದೊರಕಿಸುವಲ್ಲಿ ಶ್ರಮಿಸಿದ್ದಾರೆ. ಅವರೆಲ್ಲರನ್ನೂ ನೆನೆಯುವ ಮೂಲಕ ದೊರೆತಿರುವ ಸ್ವಾತಂತ್ರ್ಯವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.